ವಿಜಯಪುರದಲ್ಲಿ ಸಾಲ ಅರ್ಜಿಗಳ ವಿಲೇವಾರಿಗೆ ಒಂದು ವಾರದ ಗಡುವು ನೀಡಿದ ಜಿಪಂ ಉಪಕಾರ್ಯದರ್ಶಿ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಬ್ಯಾಂಕಿಗೆ ಅಗಮಿಸುವ ಗ್ರಾಹಕರೊಂದಿಗೆ ಸಹಾನುಭೂತಿ ಹಾಗೂ ಸಕಾರಾತ್ಮಕ ಮನೋಭಾವದಿಂದ ವರ್ತಿಸಿ, ಅರ್ಹ ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಡಿ ನಿಗದಿತ ಅವಧಿಯಲ್ಲಿ ಸಾಲ ಸೌಲಭ್ಯ ಒದಗಿಸಬೇಕು. ಸಾಲ ಸೌಲಭ್ಯಕ್ಕಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಅನಗತ್ಯವಾಗಿ ಬಾಕಿ ಉಳಿಸಬಾರದು ಎಂದು ಜಿಲ್ಲಾ ಪಂಚಾಯತಿಯ ಉಪ ಕಾರ್ಯದರ್ಶಿ ಅವರು ಬ್ಯಾಂಕ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾ ಅಗ್ರಣೀಯ ಬ್ಯಾಂಕ್ ವತಿಯಿಂದ ಶುಕ್ರವಾರ ದ ಜಿಲ್ಲಾ ಪಂಚಾಯತಿಯಲ್ಲಿ ಆಯೋಜಿಸಲಾಗಿದ್ದ ತ್ರೈಮಾಸಿಕ ಡಿಸ್ಟ್ರಿಕ್ಟ್ ಕನ್ಸಲ್ಟೇಟಿವ್ ಕಮಿಟಿ ಹಾಗೂ ಡಿಸ್ಟ್ರಿಕ್ಟ್ ಲೆವೆಲ್ ರಿವಿವ್ ಕಮಿಟಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬ್ಯಾಂಕಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಬರುವ ಗ್ರಾಹಕರಿಗೆ ಬ್ಯಾಂಕಿನ ಅಧಿಕಾರಿಗಳು ಸೂಕ್ತ ಸ್ಪಂದನೆ ನೀಡಬೇಕು. ಭಾರತೀಯ ರಿಸರ್ವ್ ಬ್ಯಾಂಕಿನ ಮಾರ್ಗಸೂಚಿಗಳಂತೆ ಬ್ಯಾಂಕಿಂಗ್ ಯೋಜನೆಗಳು ಹಾಗೂ ಲಭ್ಯವಿರುವ ಸೌಲಭ್ಯಗಳ ಕುರಿತು ಗ್ರಾಹಕರಿಗೆ ಅಗತ್ಯ ಮಾಹಿತಿ ಮತ್ತು ಮಾರ್ಗದರ್ಶನ ನೀಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ದಾಖಲಾತಿಗಳು ಅಪೂರ್ಣವಾಗಿದ್ದರೆ, ಅರ್ಜಿದಾರರನ್ನು ಅಲೆದಾಡಿಸದೇ ಅಗತ್ಯ ಇರುವ ದಾಖಲೆ ತಿಳಿಸಿ ಅರ್ಜಿ ಪೂರ್ಣಗೊಳಿಸಲು ಸಹಕರಿಸಬೇಕು ಎಂದು ಸೂಚಿಸಿದರು.ಅರ್ಹ ಫಲಾನುಭವಿಗಳ ಅರ್ಜಿಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಂಡು ವಿಳಂಬ ಮಾಡುವುದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪ್ರತಿಯೊಂದು ಅರ್ಜಿಯನ್ನು ನಿಗದಿತ ಕಾಲಮಿತಿಯೊಳಗೆ ಪರಿಶೀಲಿಸಿ ವಿಲೇವಾರಿ ಮಾಡಿ ಎಂದರು.
ನಿಗದಿತ ಅವಧಿಯಲ್ಲಿಯೂ ಅರ್ಜಿಗಳನ್ನು ವಿಲೇವಾರಿ ಮಾಡದೆ ವಿಳಂಬ ಮಾಡಿದಲ್ಲಿ ಸಂಬಂಧಪಟ್ಟ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಅಗ್ರಣೀಯ ಬ್ಯಾಂಕ್ ವ್ಯವಸ್ಥಾಪಕ ಬಿ. ಸಿದ್ದಯ್ಯ, ಡಿ.ಎಸ್.ಪಿ ಸುನಿಲ ಕಾಂಬಳೆ, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ವಿಕಾಸ ರಾಠೋಡ, ಆರ್ಬಿಐ ವ್ಯವಸ್ಥಾಪಕರಾದ ಶೀಲ್ ಪ್ರಿಯಾ ಗೌತಮ್, ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

