ಎಸ್ಐಆರ್: ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಕುರಿತು ಹಕ್ಕು ಮತ್ತು ಆಕ್ಷೇಪಣೆಗಳ ಸಲ್ಲಿಕೆ ಹಾಗೂ ಪರಿಷ್ಕರಣೆ ಪ್ರಕ್ರಿಯೆಯ ಕುರಿತಾಗಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ಚುನಾವಣಾ ಆಯೋಗದ ನಿರ್ದೇಶನದಂತೆ ಆಗಸ್ಟ್ ೨೪ರಂದು ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಕಟಿಸಲಾಗಿದ್ದು, ಸೆಪ್ಟೆಂಬರ್ ೨೩ರವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶವಿದೆ ಎಂದು ತಿಳಿಸಿದರು.
ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದ ಅರ್ಹ ಮತದಾರರು ಹಾಗೂ ಅಕ್ಟೋಬರ್ ೧, ೨೦೨೬ಕ್ಕೆ ೧೮ ವರ್ಷ ಪೂರ್ಣಗೊಳ್ಳುವ ಯುವಕ-ಯುವತಿಯರು ನಮೂನೆ-೬ರ ಮೂಲಕ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು.
ಮತದಾರರು ತಹಶೀಲ್ದಾರ ಕಚೇರಿ ಅಥವಾ ಮತಗಟ್ಟೆ ಮಟ್ಟದ ಅಧಿಕಾರಿಗಳನ್ನು ಸಂಪರ್ಕಿಸುವುದರ ಜೊತೆಗೆ ಮತದಾರರ ಸೇವಾ ಪೋರ್ಟಲ್ ಮೂಲಕವೂ ಆನ್ಲೈನ್ನಲ್ಲಿ ಹೆಸರು ಸೇರ್ಪಡೆ ಹಾಗೂ ಅಗತ್ಯ ತಿದ್ದುಪಡಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂಬುದನ್ನು ತಿಳಿಸಿದರು. ಮತದಾರರ ಅನುಕೂಲಕ್ಕಾಗಿ ಸೆಪ್ಟೆಂಬರ್ ೧೯ ಮತ್ತು ೨೦ರಂದು ಜಿಲ್ಲೆಯಾದ್ಯಂತ ವಿಶೇಷ ಆಂದೋಲನ ಆಯೋಜಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರತಿಯೊಂದು ಮತಗಟ್ಟೆಯಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು ಲಭ್ಯವಿದ್ದು, ಮತದಾರರಿಂದ ವಿವಿಧ ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.
ಆಕ್ಷೇಪಣೆ ಸಲ್ಲಿಸುವ ಪ್ರಕ್ರಿಯೆ ಕುರಿತು ಜಿಲ್ಲಾಧಿಕಾರಿ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸುತ್ತಾ, ಆಕ್ಷೇಪಣೆ ಸಲ್ಲಿಸುವುದು ಪ್ರತಿಯೊಬ್ಬರ ಹಕ್ಕಾಗಿದ್ದು, ಅದರೊಂದಿಗೆ ಜವಾಬ್ದಾರಿಯೂ ಇದೆ. ಸಗಟಾಗಿ (ಬಲ್ಕ್) ಆಕ್ಷೇಪಣೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ. ಪ್ರತಿಯೊಂದು ಆಕ್ಷೇಪಣೆಗೆ ಪ್ರತ್ಯೇಕ ಅರ್ಜಿಯನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.
ಪ್ರಸ್ತುತ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ-ಮನೆಗೆ ತೆರಳಿ ಸಂಬಂಧಿಸಿದ ಮತದಾರರಿಗೆ ನೋಟಿಸ್ಗಳನ್ನು ನೀಡುತ್ತಿದ್ದಾರೆ. ನೋಟಿಸ್ನಲ್ಲಿ ವಿಚಾರಣೆಗೆ ಹಾಜರಾಗಬೇಕಾದ ದಿನಾಂಕ, ಸ್ಥಳ ಹಾಗೂ ಸಮಯವನ್ನು ನಮೂದಿಸಲಾಗಿರುತ್ತದೆ. ನೋಟಿಸ್ನಲ್ಲಿ ಕ್ಯೂಆರ್ ಕೋಡ್ ಸಹ ನೀಡಲಾಗಿದ್ದು, ವಿಚಾರಣೆಗೆ ಹಾಜರಾಗುವ ಸಂದರ್ಭದಲ್ಲಿ ಜತೆಗೆ ತರಬೇಕಾದ ಅಗತ್ಯ ದಾಖಲೆಗಳ ಕುರಿತು ಸಂಪೂರ್ಣ ಮಾಹಿತಿಯನ್ನು ಅದರ ಮೂಲಕ ಪಡೆಯಬಹುದಾಗಿದೆ ಎಂದು ತಿಳಿಸಿದರು.
ನೋಟಿಸ್ ಪಡೆದ ಮತದಾರರು ನಿಗದಿತ ದಿನಾಂಕ, ಸಮಯ ಹಾಗೂ ಸ್ಥಳದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಿ ಪ್ರಕ್ರಿಯೆಯನ್ನು ಪೂರ್ಣಗೊಳಿಸುವಂತೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ತಮ್ಮ ವ್ಯಾಪ್ತಿಯಲ್ಲಿ ಮತದಾರರಿಗೆ ಮಾಹಿತಿ ನೀಡಿ ಪ್ರೇರೇಪಿಸಬೇಕು. ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ವಹಿಸಬೇಕು. ಮತದಾನ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವೀಪ್ ಸಮಿತಿಯಿಂದಲೂ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಚುನಾವಣಾ ವಿಭಾಗದ ತಹಶೀಲ್ದಾರ್ ಪ್ರೇಮಸಿಂಗ್ ಪವಾರ್, ಚುನಾವಣಾ ವಿಭಾಗದ ಸಚ್ಚಿದಾನಂದ ತೇರದಾಳ ಸೇರಿದಂತೆ ಚುನಾವಣಾ ವಿಭಾಗದ ಅಧಿಕಾರಿಗಳು ಉಪಸ್ಥಿತರಿದ್ದರು.

