ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ ಕಾಲಕ್ಕೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಆದೇಶ ಹೊರಡಿಸಿದ್ದಾರೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಸೆ.೧೪ರ ಬೆಳಿಗ್ಗೆ ೬ರಿಂದ ಸೆ.೧೫ರ ಬೆಳಿಗ್ಗೆ ೬ ಗಂಟೆಯವರೆಗೆ ಹಾಗೂ ೫ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಸೆ.೧೮ರ ಬೆಳಿಗ್ಗೆ ೬ ಗಂಟೆಯಿಂದ ಸೆ.೧೯ರ ಬೆಳಿಗ್ಗೆ ೬ ಗಂಟೆಯವರೆಗೆ, ೭ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೦ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೧ರ ಬೆಳಿಗ್ಗೆ ೬ ಗಂಟೆಯವರೆಗೆ, ೯ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೨ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೩ರ ಬೆಳಿಗ್ಗೆ ೬ ಗಂಟೆಯವರೆಗೆ ಹಾಗೂ ೧೧ನೇ ದಿನದ ವಿಸರ್ಜನೆ ಪ್ರಯುಕ್ತ ಸೆ.೨೪ರ ಬೆಳಿಗ್ಗೆ ೬ ಗಂಟೆಯಿಂದ ಸೆ.೨೫ರ ಬೆಳಿಗ್ಗೆ ೬ ಗಂಟೆಯವರೆಗೆ ಜಿಲ್ಲೆಯಾದ್ಯಂತ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಮತ್ತು ಹಂಚಿಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶಿಸಲಾಗಿದೆ.
