ವಿವಿಧ ಕ್ಷೇತ್ರಗಳ ೭೫ ಜನ ಸಾಧಕರಿಗೆ ಪ್ರಶಸ್ತಿ ಪ್ರದಾನ
ಉದಯರಶ್ಮಿ ದಿನಪತ್ರಿಕೆ
ಮುದ್ದೇಬಿಹಾಳ: ಸೆ.೧೩ರಂದು ಬೆಳಿಗ್ಗೆ ೧೦:೩೦ ಕ್ಕೆ ಪಟ್ಟಣದ ಹುಡ್ಕೋದಲ್ಲಿರುವ ಪಂಜುರ್ಲಿ ಫಂಕ್ಷನ್ ಹಾಲ್ ನಲ್ಲಿ ರಾಜ್ಯ ಯೂತ್ ಫಾರ್ ಹ್ಯೂಮನ್ ರೈಟ್ಸ್ ನ ಜಿಲ್ಲಾ ಸಮಿತಿ ಹಾಗೂ ವಿವಿಧ ಘಟಕಗಳ ಸಹಯೋಗದಲ್ಲಿ ಮಾನವ ಹಕ್ಕುಗಳ ಜಾಗೃತಿ ಸಮಾವೇಶ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಮಾನವ ಹಕ್ಕುಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಹಕ್ಕುಗಳ ರಕ್ಷಣೆ ಹಾಗೂ ಸಾಮಾಜಿಕ ನ್ಯಾಯದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಈ ಸಮಾವೇಶವನ್ನು ಹಮ್ಮಿಕೊಂಡಿದ್ದು, ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ ಒಟ್ಟು ೭೫ ಸಾಧಕರನ್ನು ಗುರುತಿಸಿ ಹಸಿರು-ಉಸಿರು, ಸಮಾಜ ರತ್ನ, ವೀರ ರತ್ನ ಮತ್ತು ಸಾಧಕ ರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು. ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಮಹತ್ವ, ಸಂವಿಧಾನಾತ್ಮಕ ಹಕ್ಕುಗಳು, ಸಾಮಾಜಿಕ ನ್ಯಾಯ ಹಾಗೂ ಹಕ್ಕುಗಳ ಉಲ್ಲಂಘನೆಯ ಸಂದರ್ಭಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವಿಚಾರ ವಿನಿಮಯ ನಡೆಯಲಿದೆ.
ಕಾರ್ಯಕ್ರಮವನ್ನು ನಿವೃತ್ತ ನ್ಯಾಯವಾದಿ ಜಿ.ಕೆ.ಗೋಖಲೆ ಉದ್ಘಾಟಿಸಲಿದ್ದು, ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಮಲ್ಲಿಕಾರ್ಜುನ ರಾಜು ಅಧ್ಯಕ್ಷತೆ ವಹಿಸಲಿದ್ದಾರೆ. ಮಾನವ ಹಕ್ಕುಗಳ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಉಮೇಶ ಎನ್ ಪುಷ್ಪನಮನ ಸಲ್ಲಿಸಲಿದ್ದು, ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ದ ದಕ್ಷಿಣ ಭಾರತದ ಪ್ರಧಾನ ಕಾರ್ಯದರ್ಶಿ ಎ.ಬಿ.ಹೊಸಮನಿ ಮುಖ್ಯ ಭಾಷಣ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಎ.ಎಂ.ಬಾಬುನಾಯಕ, ಜಿ.ಎಂ.ದಯಾನಂದ, ಬಿ.ಆರ್.ಪ್ರವೀಣಕುಮಾರ, ಕುಮಾರ ಎನ್, ಅಭಿಷೇಕ ಚಕ್ರವರ್ತಿ, ಸುಭ್ರಹ್ಮಣ್ಯ ಡಿ.ವಿ, ಪುಟ್ಟರಂಗಯ್ಯ ಎನ್, ಸುಭ್ರಹ್ಮಣ್ಯ ಪೂಜಾರಿ, ಕೆ.ಜಯಚಂದ್ರ, ಅಯ್ಯಪ್ಪ ದೊಡಮನಿ, ಸದಾಶಿವ ಅಂಗಡಿ ಭಾಗವಹಿಸಲಿದ್ದಾರೆ.
ಮಾನವ ಹಕ್ಕುಗಳ ರಕ್ಷಣೆಯೊಂದಿಗೆ ಸಾಮಾಜಿಕ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟನೆಯ ಜಿಲ್ಲಾಧ್ಯಕ್ಷ ಪ್ರಧಾನಿ ವಾಲಿಕಾರ ಸೇರಿದಂತೆ ಎಲ್ಲ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
