ಅಥಣಿಯಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಸಭೆಯಲ್ಲಿ ಸಚಿವ ಲಕ್ಷ್ಮಣ ಸವದಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ಅಥಣಿ: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೆ ಮಾಲೀಕರು ಜನರ ತೆರಿಗೆ ಹಣದಿಂದ ವೇತನ ಪಡೆಯುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಜನರ ಸೇವಕರಾಗಿದ್ದು, ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನಮ್ಮೆಲ್ಲರ ಕರ್ತವ್ಯ ಎಂದು ಸಹಕಾರ ಸಚಿವ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಹೇಳಿದರು.
ಅವರು ಪಟ್ಟಣದ ಖೋತ ಸಭಾ ಭವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮಾತನಾಡಿ, ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದರು.
ಕಾನೂನುಬದ್ಧವಾಗಿ ಸಾಧ್ಯವಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಹರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಯಾವ ಅಧಿಕಾರಿಯ ಕಚೇರಿ ಎಲ್ಲಿದೆಯೊ ಆ ಕೇಂದ್ರ ಸ್ಥಾನದಲ್ಲೇ ಅವರು ಕಡ್ಡಾಯವಾಗಿ ವಾಸ್ತವ್ಯ ಮಾಡಬೇಕು ವಾಸ್ತವ್ಯಕ್ಕೆ ಸಂಬಂಧಿಸಿದಂತೆ ಮನೆ ಬಾಡಿಗೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಮೇಲಾಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಪ್ರತಿ ಶನಿವಾರ ಹೋಬಳಿ ಮಟ್ಟದಲ್ಲಿ ಪ್ರಜಾ ಸೇವಾ ಆಂದೋಲನ ನಡೆಸಬೇಕು. ಸಾರ್ವಜನಿಕರಿಂದ ಸ್ವೀಕರಿಸುವ ಪ್ರತಿಯೊಂದು ಅರ್ಜಿಗೂ ಸ್ವೀಕೃತಿ ನೀಡಬೇಕು. ಅರ್ಜಿಯಲ್ಲಿರುವ ಸಮಸ್ಯೆಯನ್ನು ಸಾಧ್ಯವಾದಷ್ಟು ತಕ್ಷಣವೇ ಪರಿಹರಿಸಬೇಕು. ಕಾನೂನಿನ ವ್ಯಾಪ್ತಿಗೆ ಬಾರದ ಅರ್ಜಿಗಳಿಗೆ ಕಾರಣವನ್ನು ಲಿಖಿತವಾಗಿ ತಿಳಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕಾರ್ಯಾಂಗ ಮತ್ತು ಶಾಸಕಾಂಗ ಒಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಆಡಳಿತ ಪರಿಣಾಮಕಾರಿಯಾಗಲು ಸಾಧ್ಯ ಬಡವರು, ದುರ್ಬಲರು ಹಾಗೂ ಹಣ, ಜನಬಲ ಅಥವಾ ಪ್ರಭಾವ ಇಲ್ಲದವರ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿಕೊಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ.
ಇಂದು ಸ್ವೀಕರಿಸಿದ ಅರ್ಜಿಗಳನ್ನು ಸಂಬಂಧಿಸಿದ ಇಲಾಖೆಗೆ ತಕ್ಷಣವೇ ಕಳುಹಿಸಿ ಪರಿಹಾರ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಚಿಕ್ಕೋಡಿ ಉಪವಿಭಾಗಾಧಿಕಾರಿ ಸುಭಾಸ ಸಂಪಗಾವಿ, ತಾಲೂಕಾ ದಂಡಾಧಿಕಾರಿ ಸಿದರಾಯ ಭೋಸಗಿ, ಪಂಚ ಗ್ಯಾರಂಟಿ ಯೋಜನೆ ಅಧ್ಯಕ್ಷ ಸಿದ್ಧಾರ್ಥ ಸಿಂಗೆ, ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಪುರಸಭೆ ಅಧ್ಯಕ್ಷ ಶಿವಲೀಲಾ ಬುಟಾಳಿ, ಉಪಾಧ್ಯಕ್ಷ ಭುವನೇಶ್ವರಿ ಯಕ್ಕಂಚಿ, ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

