ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ನಗರದಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗಿರುವ ಹಾಗೂ ಮನೆಗಳಲ್ಲಿ ಪೂಜಿಸಲಾಗುವ ಗಣೇಶ ಮೂರ್ತಿಗಳ ವಿಸರ್ಜನೆ ಸುಗಮವಾಗಿ, ಸುರಕ್ಷಿತವಾಗಿ ನಡೆಯುವಂತೆ ವಿಜಯಪುರ ಮಹಾನಗರ ಪಾಲಿಕೆಯು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಪಾಲಿಕೆಯು ಸಾರ್ವಜನಿಕರ ಸುರಕ್ಷತೆ, ನೈರ್ಮಲ್ಯ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡಿ ನಗರದ ವಿವಿಧೆಡೆ ಕೃತಕ ಗಣೇಶ ಮೂರ್ತಿ ವಿಸರ್ಜನಾ ಹೊಂಡಗಳು, ಮೊಬೈಲ್ ಟ್ಯಾಂಕ್ಗಳು ಹಾಗೂ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಾಗಿದೆ.
ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ನಡೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜೈಲ ದರ್ಗಾ ಹತ್ತಿರ ೧೦೦x೪೦ ಅಡಿ ಹಾಗೂ ಕೆಎಸ್ಆರ್ಟಿಸಿ ಸ್ಯಾಟ್ಲೈಟ್ ಬಸ್ ನಿಲ್ದಾಣದ ಹತ್ತಿರ ೪೦x೪೦ ಅಡಿ ಅಳತೆಯ ವಿಶಾಲ ಕೃತಕ ಹೊಂಡಗಳನ್ನು ನಿರ್ಮಿಸಲಾಗಿದೆ. ಸುಮಾರು ಎರಡು ಅಡಿಗಳವರೆಗಿನ ಗಣೇಶ ಮೂರ್ತಿಗಳ ವಿಸರ್ಜನೆಗಾಗಿ ತಾಜಬಾವಡಿ ಆವರಣದಲ್ಲಿರುವ ಖಾಯಂ ಪುಷ್ಕರಣಿಯನ್ನು ಸಹ ಕಾಯ್ದಿರಿಸಲಾಗಿದೆ.
ಇದರೊಂದಿಗೆ ನಗರದ ವಿವಿಧ ವಾರ್ಡ್ಗಳ ವ್ಯಾಪ್ತಿಯಲ್ಲಿರುವ ಶ್ರೀನಗರ ಪಾರ್ಕ್, ಕೆ.ಸಿ. ನಗರ, ಐಟಿಐ ಕಾಲೇಜು ಹಿಂಭಾಗ, ಕಲ್ಯಾಣ ನಗರ, ಪಾರೇಕ ನಗರ, ಸ್ವಾಮಿ ವಿವೇಕಾನಂದ ಗಾರ್ಡನ್, ಗಣೇಶ ನಗರ, ಜಲನಗರ ಪಾಲಿಕೆ ಕಚೇರಿ, ರಾಮನಗರ ಬಸ್ ನಿಲ್ದಾಣ ಹಿಂಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆವರಣ, ಅಯ್ಯಪ್ಪ ಸ್ವಾಮಿ ಗುಡಿ ಹಾಗೂ ಶಿವನಗರ ಗಾರ್ಡನ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕೃತಕ ವಿಸರ್ಜನಾ ಹೊಂಡಗಳನ್ನು ನಿರ್ಮಿಸಲಾಗಿದೆ.
ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶ ಮೂರ್ತಿ ವಿಸರ್ಜಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ಮಹಾನಗರ ಪಾಲಿಕೆಯಿಂದ ಸಂಚಾರಿ ಮೊಬೈಲ್ ಟ್ಯಾಂಕ್ಗಳ ವ್ಯವಸ್ಥೆಯನ್ನೂ ಮಾಡಲಾಗಿದೆ.
ವಿಸರ್ಜನಾ ಕೇಂದ್ರಗಳಲ್ಲಿ ರಾತ್ರಿ ವೇಳೆಯಲ್ಲಿಯೂ ಯಾವುದೇ ತೊಂದರೆಯಾಗದಂತೆ ವಿದ್ಯುತ್ ಹಾಗೂ ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ. ಸಾರ್ವಜನಿಕರ ಸುರಕ್ಷತೆಗಾಗಿ ಬ್ಯಾರಿಕೇಡ್ಗಳನ್ನು ಅಳವಡಿಸಿ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನ ಮಾರ್ಗಗಳ ವ್ಯವಸ್ಥೆ ಕಲ್ಪಿಸಲಾಗಿದೆ. ವಿಸರ್ಜನಾ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡಲು ಹೆಚ್ಚುವರಿಯಾಗಿ ಪೌರಕಾರ್ಮಿಕರ ತಂಡಗಳನ್ನು ನಿಯೋಜಿಸಲಾಗಿದೆ.ವಿಸರ್ಜನೆಯ ಸಂದರ್ಭದಲ್ಲಿ ಸಂಗ್ರಹವಾಗುವ ತ್ಯಾಜ್ಯವನ್ನು ತ್ವರಿತವಾಗಿ ವಿಲೇವಾರಿ ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ.
ಗಣೇಶ ಮೂರ್ತಿಗಳ ವಿಸರ್ಜನೆಯನ್ನು ನೈಸರ್ಗಿಕ ಜಲಮೂಲಗಳಲ್ಲಿ ನಡೆಸುವುದರಿಂದ ಉಂಟಾಗಬಹುದಾದ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಪಾಲಿಕೆ ನಿರ್ಮಿಸಿರುವ ಕೃತಕ ಹೊಂಡ ಹಾಗೂ ನಿಗದಿಪಡಿಸಿರುವ ವಿಸರ್ಜನಾ ಸ್ಥಳಗಳನ್ನೇ ಬಳಸುವಂತೆ ಮನವಿ ಮಾಡಲಾಗಿದೆ. ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳು, ಪ್ಲಾಸ್ಟಿಕ್ ಅಲಂಕಾರಿಕ ಸಾಮಗ್ರಿಗಳು ಸೇರಿದಂತೆ ಪರಿಸರಕ್ಕೆ ಹಾನಿಕಾರಕ ವಸ್ತುಗಳನ್ನು ಜಲಮೂಲಗಳಿಗೆ ಹಾಕದಂತೆ ಪಾಲಿಕೆ ಸೂಚಿಸಿದೆ.
ಪೂಜಾ ಸಾಮಗ್ರಿಗಳಾದ ಹೂವು, ಹಾರ ಸೇರಿದಂತೆ ಇತರೆ ವಸ್ತುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ವಿಸರ್ಜನಾ ಸ್ಥಳಗಳಲ್ಲಿ ಸಾರ್ವಜನಿಕರು ಪಾಲಿಕೆಯ ಸಿಬ್ಬಂದಿಯೊಂದಿಗೆ ಸಹಕರಿಸಿ, ಸ್ವಚ್ಛತೆ ಹಾಗೂ ಪರಿಸರ ಸಂರಕ್ಷಣೆಗೆ ಆದ್ಯತೆ ನೀಡುವಂತೆ ಮನವಿ ಮಾಡಲಾಗಿದೆ.
ಗಣೇಶ ಮೂರ್ತಿಗಳ ವಿಸರ್ಜನೆ ಶಾಂತಿಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ನಡೆಯಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ನಗರದ ನಾಗರಿಕರು ಪಾಲಿಕೆಯು ಕಲ್ಪಿಸಿರುವ ಗಣೇಶ ಮೂರ್ತಿ ವಿಸರ್ಜನಾ ಸೌಲಭ್ಯಗಳನ್ನು ಬಳಸಿಕೊಂಡು ಶಾಂತಿ, ಸುವ್ಯವಸ್ಥೆ, ಸ್ವಚ್ಛತೆ ಹಾಗೂ ಪರಿಸರ ಸ್ನೇಹಿ ರೀತಿಯಲ್ಲಿ ಗಣೇಶೋತ್ಸವ ಆಚರಿಸಲು ಸಹಕರಿಸಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಅವರು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

