ಉದಯರಶ್ಮಿ ದಿನಪತ್ರಿಕೆ
ಕೊಲ್ಹಾರ: ಪ್ರಜಾಪ್ರಭುತ್ವದ ತಳಹದಿಯಾಗಿರುವ ಮತದಾನದ ಹಕ್ಕಿನ ಮಹತ್ವವನ್ನು ಯುವಜನರು ಅರಿತುಕೊಂಡು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಸಂತೋಷ ಮ್ಯಾಗೇರಿ ಹೇಳಿದರು.
ಪಟ್ಟಣದ ಶ್ರೀ ಸಂಗಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ಯುವ ಸಂಸತ್ ಸಭೆ ಕಾರ್ಯಕ್ರಮಕ್ಕೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಪ್ರಜಾಪ್ರಭುತ್ವದ ಪ್ರಮುಖ ಅಸ್ತ್ರವಾಗಿದ್ದು, ಅರ್ಹ ಪ್ರತಿಯೊಬ್ಬ ಯುವಕ-ಯುವತಿಯೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಂಡು ಮತದಾನದ ಹಕ್ಕನ್ನು ಸಮರ್ಥವಾಗಿ ಚಲಾಯಿಸಬೇಕು. ದೇಶದ ಭವಿಷ್ಯ ರೂಪಿಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮನು ಪತ್ತಾರ ಅವರು ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಿದರು.
ಉಪನ್ಯಾಸಕ ಎಂ.ಎಂ. ಯಂಡಿಗೇರಿ ಅವರು ಪ್ರಜಾಪ್ರಭುತ್ವದ ತಳಹದಿ ಹಾಗೂ ವಿವಿಧ ಪ್ರಕಾರಗಳ ಕುರಿತು ಮಾತನಾಡಿ, ಜಾಗತಿಕ ಪ್ರಜಾಪ್ರಭುತ್ವ ಸೂಚ್ಯಂಕದಲ್ಲಿ ಭಾರತದ ಸ್ಥಾನಮಾನ ಸೇರಿದಂತೆ ಪ್ರಜಾಪ್ರಭುತ್ವ ಎದುರಿಸುತ್ತಿರುವ ಸವಾಲುಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುನೀಲ್ ಮದ್ದೀನ ಮಾತನಾಡಿ, ಶಿಕ್ಷಣವಂತ ಹಾಗೂ ಜವಾಬ್ದಾರಿಯುತ ಯುವಜನರಿಂದಲೇ ಪ್ರಜಾಪ್ರಭುತ್ವ ಮತ್ತಷ್ಟು ಬಲಿಷ್ಠವಾಗಲು ಸಾಧ್ಯ. ಯುವಕರು ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಎ.ಡಿ. ಚೌವ್ಹಾಣ್ ಮಾತನಾಡಿ, ಯುವ ಸಂಸತ್ ರಚನೆಯು ವಿದ್ಯಾರ್ಥಿಗಳಿಗೆ ಸಂಸದೀಯ ವ್ಯವಸ್ಥೆ, ಚರ್ಚೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಬಗ್ಗೆ ಪ್ರಾಯೋಗಿಕ ಅರಿವು ಮೂಡಿಸುವ ಮಹತ್ವದ ವೇದಿಕೆಯಾಗಿದೆ. ಭವ್ಯ ಭಾರತದ ನಿರ್ಮಾಣಕ್ಕೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಸ್.ಜಿ. ಜಮಖಂಡಿ, ಉಪತಹಸೀಲ್ದಾರ್ ಎನ್.ಕೆ. ನದಾಫ್, ಶಿಕ್ಷಣ ಸಂಯೋಜಕ ವ್ಹಿ.ಎಚ್. ಪುರೋಹಿತ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಕೆ.ಎಸ್. ಬಾಲಗೊಂಡ, ಎಎಸ್ಐ ಎಸ್.ಆರ್. ಪವಾರ, ಸಂಪನ್ಮೂಲ ವ್ಯಕ್ತಿಗಳಾದ ಸಂಗಮೇಶ ಜಂಗಮಶೆಟ್ಟಿ, ಶಿವಶರಣ ತಡಲಗಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಧ್ಯಾಪಕ ಮೇಟಿ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಮಂಜುನಾಥ ಮಟ್ಯಾಳ ವಂದಿಸಿದರು.

