ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟಿಸಿದ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಶಿಕ್ಷಣಕ್ಕೆ ನೀಡುವಷ್ಟೇ ಮಹತ್ವವನ್ನು ದೈಹಿಕ ಶಿಕ್ಷಣ ಮತ್ತು ಕ್ರೀಡೆಗೂ ನೀಡಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದ್ದಾರೆ.
ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಮಹಾವಿದ್ಯಾಲಯಲ್ಲಿ ಆಯೋಜಿಸಲಾದ ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಕಲಬುರಗಿ ವಿಭಾಗೀಯ ಪುರುಷರ ಕಬ್ಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಗೆಲುವು-ಸೋಲು ಸಹಜ. ಆದರೆ ಪ್ರತಿಯೊಂದು ಪಂದ್ಯವೂ ವಿದ್ಯಾರ್ಥಿಗಳಿಗೆ ಹೊಸ ಅನುಭವ ಹಾಗೂ ಕಲಿಕೆಯನ್ನು ನೀಡುತ್ತದೆ. ಗೆಲುವನ್ನು ವಿನಯದಿಂದ ಸ್ವೀಕರಿಸುವುದು, ಸೋಲಿನಿಂದ ಪಾಠ ಕಲಿತು ಮತ್ತೆ ಪ್ರಯತ್ನಿಸುವುದು ಹಾಗೂ ತಂಡದ ಸಹ ಆಟಗಾರರೊಂದಿಗೆ ಸಮನ್ವಯದಿಂದ ಕಾರ್ಯನಿರ್ವಹಿಸುವ ಗುಣಗಳನ್ನು ಕ್ರೀಡೆ ಬೆಳೆಸುತ್ತದೆ. ಈ ಗುಣಗಳು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ವೃತ್ತಿಜೀವನದಲ್ಲಿಯೂ ಸಹಕಾರಿಯಾಗುತ್ತವೆ ಎಂದು ಅವರು ಹೇಳಿದರು.
ದೇಶಿ ಕ್ರೀಡೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡುವ ಅಗತ್ಯವಿದೆ. ಕಬ್ಬಡ್ಡಿಯಂಥ ದೇಶಿ ಕ್ರೀಡೆಗಳು ದೈಹಿಕ ಸಾಮರ್ಥ್ಯದ ಜೊತೆಗೆ ಏಕಾಗ್ರತೆ, ವೇಗ, ತಂತ್ರಗಾರಿಕೆ ಮತ್ತು ತಂಡದ ಸಹಕಾರವನ್ನು ಬೆಳೆಸುತ್ತವೆ. ಇಂಥ ಕ್ರೀಡೆಗಳನ್ನು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಳವಡಿಸಿಕೊಳ್ಳುವುದರಿಂದ ಕ್ರೀಡಾ ಸಂಸ್ಕೃತಿಯನ್ನು ಮತ್ತಷ್ಟು ಬಲಪಡಿಸಬಹುದು ಎಂದು ಅವರು ತಿಳಿಸಿದರು.
140 ಕೋಟಿಗೂ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತದಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿರುವುದು ವಿಷಾದನೀಯ. ವಿದ್ಯಾರ್ಥಿಗಳು ಮೊಬೈಲ್ ಹಾಗೂ ಇತರ ಚಟುವಟಿಕೆಗಳಿಗೆ ಸೀಮಿತವಾಗದೆ ದೈಹಿಕ ಚಟುವಟಿಕೆ ಮತ್ತು ಕ್ರೀಡೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು. ನಿಯಮಿತ ಕ್ರೀಡಾಭ್ಯಾಸವು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಉಲ್ಲಾಸಕ್ಕೂ ಸಹಕಾರಿಯಾಗಿದೆ. ಕ್ರೀಡೆಯನ್ನು ವೃತ್ತಿಯನ್ನಾಗಿ ಪರಿಗಣಿಸಿ ಸಾಧನೆ ಮಾಡಬಹುದು. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನಾನಾ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ದೊರೆಯುತ್ತಿವೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ಕ್ರೀಡಾಪಟುಗಳನ್ನು ಉತ್ತೇಜಿಸಲು ಅನೇಕ ಅವಕಾಶಗಳನ್ನು ಕಲ್ಪಿಸುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಮ್ಮಲ್ಲಿರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ ಅದನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.
ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಶಾಲ್ಮೊನ್ ಚೋಪಡೆ ಮಾತನಾಡಿದರು.
ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ. ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಸ್. ಎಸ್. ಕೋರಿ, ರಾಜೀವ ಗಾಂಧಿ ಆರೋಗ್ಯ ವಿವಿ ಕಲಬುರಗಿ ವಿಭಾಗೀಯ ಸಂಯೋಜಕ ಮತ್ತು ದೈಹಿಕ ಶಿಕ್ಷಣ ವಿಭಾಗದ ಕೈಲಾಸ ಹಿರೇಮಠ, ಶ್ರೀ ಬಿ. ಎಂ. ಪಾಟೀಲ್ ನರ್ಸಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮತ್ತು ಕ್ರೀಡಾ ವಿಭಾಗದ ಮುಖ್ಯಸ್ಥ ಅನಿಲ ಪಡಗಾನೂರ ಮುಂತಾದವರು ಉಪಸ್ಥಿತರಿದ್ದರು.
ಡಾ.ಅಮಿತಕುಮಾರ ಬಿರಾದಾರ ಸ್ವಾಗತಿಸಿದರು. ಡಾ. ಜಯಶ್ರೀ ಪುಜಾರಿ ಹಾಗೂ ಭಾಗ್ಯಶ್ರೀ ಭಾಗೆವಾಡಿ ನಿರೂಪಿಸಿದರು. ಅನಿಲ ಪಡಗಾನೂರ ವಂದಿಸಿದರು.

