ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ನಿಜಾಮರ ಆಡಳಿತದಿಂದ ವಿಮುಕ್ತಿ ಪಡೆದ ದಿನ ಹೋರಾಟದಲ್ಲಿ ಮಡಿದವರ ಸ್ಮರಣೆ ಮಾಡುವ ದಿನವೇ ಸಪ್ಟೆಂಬರ್, 17 ಎಂದು ದಲಿತ ಸಂಘರ್ಷ ಸಮಿತಿ ಭೀಮವಾದ ರಾಜ್ಯ ಸಂಘಟನಾ ಸಂಚಾಲಕ ಶಿವಶರಣಪ್ಪ ವಾಡಿ ಹೇಳಿದರು.
ಪಟ್ಟಣದ ಸಮೀಪವಿರುವ ಮಾಲಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ 79 ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 13 ತಿಂಗಳು ತಡವಾಗಿ ಸರ್ದಾರ್ ವಲ್ಲಭಭಾಯ್ ಪಟೇಲ್ ನೇತೃತ್ವದ ಸೈನಿಕ ಕಾರ್ಯಾಚರಣೆ ಹಾಗೂ ಅನೇಕ ಮಹನೀಯರು ತ್ಯಾಗ ಬಲಿದಾನ ಫಲವಾಗಿ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳು ಭಾರತದ ಒಕ್ಕೂಟದಲ್ಲಿ ವೀಲಿನಗೊಂಡ ಐತಿಹಾಸಿಕ ದಿನವನ್ನು ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯೆಂದು ಆಚರಿಸಲಾಗುತ್ತದೆ ಎಂದರು.
ಮುಖ್ಯ ಶಿಕ್ಷಕ ಮಲ್ಲಣ್ಣ ಕುಂಬಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಶಾಲಾ ಶಿಕ್ಷಕರು, ಗ್ರಾಮ ಪಂಚಾಯಿತಿ ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

