ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಸಮಾಜದ ಅತ್ಯಂತ ಶ್ರೇಷ್ಠ ವ್ಯಕ್ತಿಗಳ ಸಾಲಿನಲ್ಲಿ ಶಿಕ್ಷಕರು ನಿಲ್ಲುತ್ತಾರೆ. ಶಿಕ್ಷಕರು ಕೇವಲ ಶಿಕ್ಷಣ ನೀಡುವುದಲ್ಲದೆ, ಮಕ್ಕಳಿಗೆ ಸಂಸ್ಕಾರ ಹಾಗೂ ಬದುಕಿನ ಮೌಲ್ಯಗಳನ್ನು ಕಲಿಸುವ ಮಹತ್ತರ ಜವಾಬ್ದಾರಿ ಹೊಂದಿದ್ದಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಸಿಂದಗಿ ನಗರದ ಗುಂದಗಿ ಫಂಕ್ಷನ್ ಹಾಲ್ನಲ್ಲಿ ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಶಿಕ್ಷಕರ ದಿನೋತ್ಸವ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೮ನೇ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಡೀ ಜೀವನವನ್ನು ಮಕ್ಕಳ ಶ್ರೇಯೋಭಿವೃದ್ಧಿಗೆ ಮುಡುಪಾಗಿಟ್ಟ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ವಿಶ್ವವಿದ್ಯಾಲಯದ ಕುಲಪತಿಯಾಗಿ, ಪ್ರಾಧ್ಯಾಪಕರಾಗಿ, ದೇಶದ ಉಪರಾಷ್ಟ್ರಪತಿಯಾಗಿ ಹಾಗೂ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುವ ಮೂಲಕ ಶಿಕ್ಷಕ ಸಮೂಹಕ್ಕೆ ದಾರಿದೀಪವಾಗಿದ್ದಾರೆ. ಶಿಕ್ಷಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಶಾಲಾ ಕಟ್ಟಡಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ವಿಶೇಷ ಅನುದಾನ ಕಲ್ಪಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಮುನ್ನುಡಿ ಬರೆಯಲಾಗುವುದು ಎಂದರು.
ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಯರನಾಳ ಸಂಸ್ಥಾನ ವಿರಕ್ತಮಠದ ಗುರು ಸಂಗನಬಸವ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಈ ಸಂದರ್ಭದಲ್ಲಿ ದಿ. ಎಂ.ಸಿ.ಮನಗೂಳಿ ಪ್ರತಿಷ್ಠಾನ ವತಿಯಿಂದ ತಾಲೂಕಿನ ಶಿಕ್ಷಕರಿಗೆ ಬ್ಯಾಗ್ಗಳನ್ನು ವಿತರಿಸಲಾಯಿತು. ಅಲ್ಲದೆ, ೧೨೦ ಜನ ನಿವೃತ್ತ ಶಿಕ್ಷಕರು, ಮೃತ ಶಿಕ್ಷಕರ ಕುಟುಂಬದ ಸದಸ್ಯರನ್ನು ಹಾಗೂ ೨೦೨೬ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.೧೦೦ರಷ್ಟು ಫಲಿತಾಂಶ ದಾಖಲಿಸಿರುವ ೪೨ ಪ್ರೌಢಶಾಲೆಗಳ ಮುಖ್ಯಸ್ಥರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮಕ್ಕೂ ಮುನ್ನ ಬೆಳಿಗ್ಗೆ ೯ ಗಂಟೆಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರವನ್ನು ಸಾರೋಟಿನಲ್ಲಿ ಇರಿಸಿ, ವಾದ್ಯಮೇಳಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ವೇದಿಕೆಯ ಮೇಲೆ ತಾಪಂ ಅಧಿಕಾರಿ ಅನೀಲ ಹಳ್ಳಿ, ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಸಂತೋಷ ಸಾಲಿ, ಬಸವರಾಜ ತೆಲ್ಲೂರ, ಸಾಹೇಬಗೌಡ ಬಿರಾದಾರ, ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್. ಟಕ್ಕೆ, ಶಿಕ್ಷಕರ ಸಂಘದ ತಾಲೂಕಾಧ್ಯಕ್ಷೆ ಎಸ್.ಎಂ. ಚಿಗರಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಚ್. ಬಿರಾದಾರ, ನೌಕರರ ಸಂಘದ ಅಧ್ಯಕ್ಷ ಅಶೋಕ ತೆಲ್ಲೂರ, ಮಹಾಮಂಡಲದ ಅಧ್ಯಕ್ಷ ಅರುಣ ನಾಯ್ಕೋಡಿ, ಅನುದಾನಿತ ಪ್ರೌಢಶಾಲೆಗಳ ಅಧ್ಯಕ್ಷ ಶಿವಪುತ್ರ ಕಿರನಳ್ಳಿ, ಶಿಕ್ಷಣ ಸಂಯೋಜಕ ಹಾಗೂ ಅಕ್ಷರ ದಾಸೋಹ ಅಧಿಕಾರಿ ಎ.ಎಸ್. ಡೋಣೂರ, ದೈಹಿಕ ಶಿಕ್ಷಣ ಪರಿವೀಕ್ಷಕ ರಮೇಶ ಬಿರಾದಾರ, ಶಿಕ್ಷಕರಾದ ರವಿ ಬಿರಾದಾರ, ಶಿಕ್ಷಕಿಯರಾದ ಜಯಶ್ರೀ ಬೆಣ್ಣಿ, ಜಯಶ್ರೀ ನಾಯಕ, ಬಸಮ್ಮ ಬಜಂತ್ರಿ ಸೇರಿದಂತೆ ಹಲವರು ವೇದಿಕೆಯಲ್ಲಿದ್ದರು.
ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿಯರು ಪ್ರಾರ್ಥನೆ ಹಾಗೂ ನಾಡಗೀತೆ ಹಾಡಿದರು. ಶಿಕ್ಷಕ ಜಗದೀಶ ಸಿಂಗೆ ಶಿಕ್ಷಕರ ಗೀತೆ ಹಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಆಲಗೂರ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು.
ಶಿಕ್ಷಕ ಶರಣು ಲಂಗೋಟಿ ನಿರೂಪಿಸಿದರು. ದೇವರ ಹಿಪ್ಪರಗಿ ಅಧ್ಯಕ್ಷ ಪಿ.ಸಿ. ತಳಕೇರಿ ವಂದಿಸಿದರು.

