ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲೆಯ ಮುದ್ದೇಬಿಹಾಳ, ಸಿಂದಗಿ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳು ಬರಪೀಡಿತ ತಾಲೂಕುಗಳು ಎಂದು ಕೇಂದ್ರ ಸರಕಾರದ ನಿಯಮಾವಳಿಗಳ ಪ್ರಕಾರ ರಾಜ್ಯ ಸರಕಾರದಿಂದ ಘೋಷಣೆ ಮಾಡಲಾಗಿದೆ ಎಂದು ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲೆ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಘೋಷಣೆಯಿಂದಾಗಿ ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಒಟ್ಟು 10 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಆಗಿದ್ದು, ಇಂಡಿ, ಚಡಚಣ ಮತ್ತು ತಾಳಿಕೋಟೆ ತಾಲೂಕುಗಳು ಮುಂದಿನ ದಿನಗಳಲ್ಲಿ ನಿಯಮಾವಳಿಗಳ ಅನುಸಾರ ಘೋಷಣೆ ಆಗಲಿವೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ವರ್ಷ ತೀವ್ರ ಮಳೆ ಅಭಾವದಿಂದ ವಿಜಯಪುರ ಜಿಲ್ಲೆಯಲ್ಲಿ ಬರದ ಛಾಯೆ ಆವರಿಸಿದ್ದು, ಸಂಪೂರ್ಣ ಜಿಲ್ಲೆಯು ಬರಪೀಡಿತವಾಗಿದೆ. ಆದರೆ, ಕೇಂದ್ರ ಸರಕಾರದ ನಿಯಮಾವಳಿಗಳ ಅನುಸಾರ ಕಾಲ-ಕಾಲಕ್ಕೆ ಸೆಟಲೈಟ್ ಮಾಹಿತಿ ಅನುಸಾರ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತಿದ್ದು, ಅದರನ್ವಯ ಇಂದು ರಾಜ್ಯದಲ್ಲಿ ಹೊಸದಾಗಿ 53 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಅದರಲ್ಲಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ, ಆಲಮೇಲ ಮತ್ತು ದೇವರಹಿಪ್ಪರಗಿ ತಾಲೂಕುಗಳು ಮಧ್ಯಮ ಬರಪೀಡಿತ ಎಂದು ಸಿಂದಗಿ ತಾಲೂಕನ್ನು ಕಠಿಣ ಬರಪೀಡಿತ ತಾಲೂಕು ಎಂದು ಘೋಷಿಸಲಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ, ರಾಜ್ಯ ಸರಕಾರ ವಿಶೇಷವಾಗಿ ನಮ್ಮ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಆದ್ದರಿಂದ ಬರಪೀಡಿತ ಎಂದು ಘೋಷಿಸುವಂತೆ ವಿವಿಧ ತಾಲೂಕುಗಳಲ್ಲಿ ರೈತ ಸಂಘಟನೆಗಳು ಹಮ್ಮಿಕೊಂಡಿರುವ ಹೋರಾಟಗಳನ್ನು ಸ್ಥಗೀತಗೊಳಿಸಬೇಕು ಎಂದು ಸಚಿವ ಎಂ.ಬಿ.ಪಾಟೀಲ ವಿನಂತಿಸಿದ್ದಾರೆ.

