ದೇವರಹಿಪ್ಪರಗಿ ಮತ್ತು ಸಿಂದಗಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನ ಸಭೆಯಲ್ಲಿ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವ ಡಾ. ಎಂ.ಬಿ.ಪಾಟೀಲ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಜಾ ಸೇವಾ ಆಂದೋಲನದ ಮೂಲಕ ಸರಕಾರವೇ ಜನರ ಮನೆ ಬಾಗಿಲಿಗೆ ಬರುತ್ತಿದೆ. ಇದು ಇಡೀ ದೇಶದಲ್ಲೇ ವಿನೂತನ ಪ್ರಯೋಗವಾಗಿದೆ. ಆದ್ದರಿಂದ ಪ್ರಜಾಸೇವೆ ಆಂದೋಲನ ಸಭೆಯಲ್ಲಿ ಸಲ್ಲಿಕೆಯಾಗುವ ಎಲ್ಲ ಅರ್ಜಿಗಳಿಗೆ ಅಧಿಕಾರಿಗಳು ಸಕಾಲದಲ್ಲಿ ಸ್ಪಂದಿಸಬೇಕು. ಇಲ್ಲವಾದಲ್ಲಿ ಅಧಿಕಾರಿಗಳ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ. ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ತಾಲೂಕ ಆಡಳಿತ, ತಾಲೂಕು ಪಂಚಾಯತಿ ಸಹಯೋಗದಲ್ಲಿ ದೇವರಹಿಪ್ಪರಗಿ ಪಟ್ಟಣದ ವಿಜಯಪುರ ರಸ್ತೆಯ ನೂತನ ತಹಶೀಲ್ದಾರ್ ಕಚೇರಿಗೆ ಕಾಯ್ದಿರಿಸಿದ ಸ್ಥಳದಲ್ಲಿ ಶನಿವಾರ ೮.೬೦ ಕೋಟಿ ರೂ. ವೆಚ್ಚದ ಎರಡಂತಸ್ತಿನ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ಸಮಾರಂಭ ಹಾಗೂ ಪ್ರಜಾ ಸೇವೆ ಆಂದೋಲನ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಸಲ್ಲಿಕೆಯಾಗಿರುವ ಅರ್ಜಿಗಳನ್ನು ನಿಗದಿತ ಅವಧಿಯಲ್ಲಿಯೇ ನಿಮ್ಮ ಹಂತದಲ್ಲಿರುವ ಅರ್ಜಿಗಳಿಗೆ ಸ್ಪಂದಿಸಿ, ಕಾಲಮಿತಿಯೊಳಗೆ ಇತ್ಯರ್ಥಪಡಿಸಬೇಕು ಎಂದ ಸಚಿವರು, ಮಹಾತ್ಮ ಗಾಂಧೀಜಿಯವರು ಹಳ್ಳಿಗಳ ಉದ್ದಾರವೇ ದೇಶದ ಉದ್ದಾರ ಎಂದು ಕನಸು ಕಂಡಿದ್ದರು. ಹಾಗಾಗಿ ಗಾಂಧೀಜಿಯವರ ಆಶಯಕ್ಕನುಗುಣವಾಗಿ ಪ್ರತಿಯೊಬ್ಬ ಅಧಿಕಾರಿಯೂ ಕಾರ್ಯನಿರ್ವಹಿಸಬೇಕು ಎಂದರು.
ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಮ್ಮ ಸರ್ಕಾರ ಈ ಪ್ರಜಾ ಸೇವೆ ಇಲಾಖೆ ಆರಂಭಿಸಿದೆ. ಇಲಾಖೆಯ ಆಶಯಗಳಿಗುನುಗುಣವಾಗಿ ದೇಶಕ್ಕೆ ಮಾದರಿಯಾಗುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದರು.
ಇಂದು ದೇವರ ಹಿಪ್ಪರಗಿಯಲ್ಲಿ ೮.೬೦ ಕೋಟಿ ರೂ. ವೆಚ್ಚದ ಎರಡು ಅಂತಸ್ತಿನ ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂಬರುವ ದಿನಗಳಲ್ಲಿ ಈ ಕಟ್ಟಡ ಪ್ರಜೆಗಳ ಆಶೋತ್ತರಗಳಿಗೆ ಕಿವಿಯಾಗಲಿದೆ ಎಂದರು.
ಸಭೆಯಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಜಯಶ್ರೀ ದೇವಣಗಾಂವ್, ಉಪಾಧ್ಯಕ್ಷರಾದ ರಮೇಶ ಮಸಬಿನಾಳ, ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಸಾಹೇಬಗೌಡ ಬಿರಾದಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ಹಹಣಾಧಿಕಾರಿಗಳಾದ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಲಕ್ಷ್ಮಣ ನಿಂಬರಗಿ, ತಹಶೀಲ್ದಾರ ನಿಂಗಪ್ಟ ಬಿರಾದಾರ ಸೇರಿದಂತೆ ಜಿಲ್ಲಾ ಹಾಗೂ ದೇವರ ಹಿಪ್ಪರಗಿ ತಾಲೂಕಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಸಾರ್ವಜನಿಕರ ಅಹವಾಲು ಆಲಿಸಿದ ಸಚಿವರು
ಸಾರ್ವಜನಿಕರ ಸಮಸ್ಯೆಗಳನ್ನು ಖುದ್ದು ಆಲಿಸಿದ ಸಚಿವರಾದ ಎಂ.ಬಿ. ಪಾಟೀಲ ಅವರು, ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು, ಇನ್ನು ಕೆಲ ಸಮಸ್ಯೆಗಳನ್ನು ತಕ್ಷಣ ಇತ್ಯರ್ಥಪಡಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಾಗಿ ಸೂಚಿಸಿದರು.

“ಪಿಂಚಣಿ, ವೃದ್ಧಾಪ್ಯ ವೇತನ, ನೀರಾವರಿ ಹಾಗೂ ವಿದ್ಯುತ್ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು.”
– ರಾಜುಗೌಡ ಪಾಟೀಲ
ದೇವರಹಿಪ್ಪರಗಿ ಶಾಸಕರು

“ತಂತ್ರಾಂಶದಲ್ಲಿ ಸಾರ್ವಜನಿಕರ ದೂರು ನಮೂದು ಮಾಡಿ ಪ್ರತ್ಯೇಕ ಐಡಿ ನೀಡಲಾಗುವುದು. ಬಳಿಕ ಇಲಾಖಾವಾರು ವರ್ಗೀಕರಿಸಿ ಒಟಿಪಿ ಮೂಲಕ ದೂರುದಾರರ ದೂರು ಪರಿಶೀಲಿಸಲು ಅವಕಾಶವಿದೆ. ಗ್ರಾಮ ಇನ್ ಮೂಲಕ ಸಮಸ್ಯೆಗಳನ್ನು ಐಡಿ ಟ್ರ್ಯಾಕಿಂಗ್ ಮಾಡಬಹುದಾಗಿದೆ.”
– ಡಾ. ಆನಂದ ಕೆ.
ಜಿಲ್ಲಾಧಿಕಾರಿ, ವಿಜಯಪುರ

S* ಸಿಂದಗಿಯಲ್ಲಿ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮ B*
ಪ್ರಜಾಸೇವೆ ಇಲಾಖೆಯಿಂದ ಮನೆಬಾಗಿಲಿಗೆ ಆಡಳಿತ
ವಿಜಯಪುರ: ಸಾರ್ವಜನಿಕರ ದೂರು ಹಾಗೂ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಆಯಾ ಇಲಾಖೆಗಳ ಹಂತದಲ್ಲಿಯೇ ತ್ವರಿತವಾಗಿ ವಿಲೇವಾರಿ ಮಾಡುವ ಉದ್ದೇಶದಿಂದ ಪ್ರಜಾಸೇವೆ ಆಂದೋಲನಾ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಜನರ ಸಮಸ್ಯೆಗಳಿಗೆ ಮನೆಬಾಗಿಲಲ್ಲೇ ಪರಿಹಾರ ಒದಗಿಸುವುದು ಸರ್ಕಾರದ ಪ್ರಮುಖ ಆಶಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಹೇಳಿದರು.
ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ ಎಂಬ ಘೋಷ ವಾಕ್ಯದಡಿ ಸಿಂದಗಿ ಪಟ್ಟಣದ ಮಾಂಗಲ್ಯ ಭವನದಲ್ಲಿ ಹಮ್ಮಿಕೊಂಡಿದ್ದ ಸಿಂದಗಿ ತಾಲೂಕಾ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳ ಪ್ರಗತಿಯನ್ನು ಪರಿಶೀಲಿಸಲು ಹಾಗೂ ಅವುಗಳ ವಿಲೇವಾರಿಯ ಬಗ್ಗೆ ಮಾಹಿತಿ ಪಡೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಭೂಸ್ವಾಧೀನ, ಹಣಕಾಸು ಹಾಗೂ ಭೂಪರಿಹಾರಕ್ಕೆ ಸಂಬಂಧಿಸಿದ ಸಂಕೀರ್ಣ ಸಮಸ್ಯೆಗಳನ್ನು ಸರ್ಕಾರದ ಹಂತಕ್ಕೆ ಕಳುಹಿಸಿ ಸೂಕ್ತವಾಗಿ ಇತ್ಯರ್ಥಪಡಿಸಲಾಗುವುದು ಎಂದರು.
ಸ್ಥಳೀಯವಾಗಿ ಕೈಗಾರಿಕೆಗಳ ಸ್ಥಾಪನೆಗೆ ಶಾಸಕ ಮನಗೂಳಿ ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಈ ಭಾಗದ ಸುಸ್ಥಿರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.

ಬೃಹತ್ ಕೈಗಾರಿಕೆ ಸ್ಥಾಪಿಸಲು ಸಚಿವರಿಗೆ ಮನವಿ ಮಾಡಿದ ಶಾಸಕ ಮನಗೂಳಿ
ಸಿಂದಗಿ ಶಾಸಕರಾದ ಅಶೋಕ ಮನಗೂಳಿ ಮಾತನಾಡಿ, ಪ್ರಜಾಸೇವಾ ಆಂದೋಲನದಲ್ಲಿ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಕಾರ್ಯ ನಡೆಯುತ್ತಿದೆ. ಕುಡಿಯುವ ನೀರು, ನೀರಾವರಿ, ವಿದ್ಯುತ್, ನಿವೇಶನ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಾರ್ವಜನಿಕರು ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದರು.ನೀರಾವರಿ ಯೋಜನೆಗಳ ವೇಗವರ್ಧನೆಗೆ ಆದ್ಯತೆ ನೀಡಲಾಗಿದೆ. ಸಿಂದಗಿ ನಗರದ ೮೨ ಫಲಾನುಭವಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ೬೦ ಫಲಾನುಭವಿಗಳಿಗೆ ಉಚಿತ ನಿವೇಶನ ಹಂಚಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮನೆ ನಿರ್ಮಾಣಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಸಿಂದಗಿ ನಗರದಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ರಿಂಗ್ ರಸ್ತೆ ನಿರ್ಮಾಣದ ಅಗತ್ಯವಿದ್ದು, ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಸಚಿವರಿಗೆ ಮನವಿ ಮಾಡಲಾಗಿದೆ. ಅಲ್ಲದೆ, ತಾಲೂಕಿನಲ್ಲಿ ಲಭ್ಯವಿರುವ ೨೭೫ ಎಕರೆ ಜಮೀನಿನಲ್ಲಿ ಬೃಹತ್ ಕೈಗಾರಿಕೆ ಸ್ಥಾಪಿಸುವ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
ಸಿಂದಗಿಯಲ್ಲಿ ಒಟ್ಟು ೭೭ ಅರ್ಜಿಗಳ ಸ್ವೀಕಾರ
ಸಿಂದಗಿಯಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ವಿವಿಧ ಇಲಾಖೆಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಒಟ್ಟು ೭೭ ಅರ್ಜಿಗಳನ್ನು ಸ್ವೀಕರಿಸಲಾಯಿತು. ಕಂದಾಯ ಇಲಾಖೆಗೆ ೨೩, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ೧೯, ಗ್ರಾಮೀಣ ಅಭಿವೃದ್ಧಿ ಇಲಾಖೆಗೆ ೧೨, ತಾಲೂಕು ಪಂಚಾಯಿತಿಗೆ ೫, ನಗರಸಭೆ/ಪೌರಾಡಳಿತ ನಿರ್ದೇಶನಾಲಯಕ್ಕೆ ೫, ಕೃಷಿ, ಶಿಕ್ಷಣ ಹಾಗೂ ಭೂಮಾಪನ ಇಲಾಖೆಗೆ ತಲಾ ೩, ಸಾರಿಗೆ ಹಾಗೂ ಲೋಕೋಪಯೋಗಿ ಇಲಾಖೆಗೆ ತಲಾ ೨ ಅರ್ಜಿಗಳು ಸಲ್ಲಿಕೆಯಾಗಿವೆ.

