ಸರ್ಕಾರಿ ಶಾಲೆಗೆ ಉಚಿತ ವಿದ್ಯುತ್, ನೀರು ಪೂರೈಕೆಗೆ ಸಿಎಂ ಆದೇಶಕ್ಕೆ ಶಿಕ್ಷಕರ ಸಂಘ ಸ್ವಾಗತ
ಆಲಮಟ್ಟಿ: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ಕುಡಿಯುವ ನೀರು ಪೂರೈಕೆಗೆ ಕನ್ನಡ ನಾಡಿನ 50 ನೇ ರಾಜ್ಯೋತ್ಸವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಸ್ವಾಗತಿಸಿದೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಸಂಘಟನೆಯ ಪದಾಧಿಕಾರಿಗಳು
ಕಳೆದ ಕೆಲ ದಿನಗಳ ಹಿಂದೆಯೂ ಸಂಘ ಈ ಕುರಿತು ಮನವಿ ಸಲ್ಲಿಸಿತ್ತು. ಅಲ್ಲದೇ ಬುಧವಾರ ಬೆಳಿಗ್ಗೆ ರಾಜ್ಯೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಆಗಮಿಸಿದ್ದ ಮುಖ್ಯಮಂತ್ರಿಗಳಿಗೆ ಸಂಘ ಮತ್ತೊಮ್ಮೆ ಮನವಿ ಸಲ್ಲಿಸಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ತಮ್ಮ ರಾಜ್ಯೋತ್ಸವ ಭಾಷಣದಲ್ಲಿ ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್ ಹಾಗೂ ಉಚಿತ ಕುಡಿಯುವ ನೀರಿನ ಘೋಷಣೆ ಮಾಡಿದ್ದಾರೆ. 50 ನೇ ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಈ ಘೋಷಣೆ ಸರ್ಕಾರಿ ಕನ್ನಡ ಶಾಲೆಗಳ ಉಳಿವಿಗೆ ಸರ್ಕಾರ ತನ್ನ ಬದ್ಧತೆಯನ್ನು ಪ್ರದರ್ಶಿಸಿದಂತಾಗಿದೆ.
ಇದರಿಂದ ರಾಜ್ಯದ ಸುಮಾರು 50 ಲಕ್ಷ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಪರವಾಗಿ ಸಂಘ ಮುಖ್ಯಮಂತ್ರಿಗಳನ್ನು ಹಾಗೂ ಶಿಕ್ಷಣ ಸಚಿವರನ್ನು ಅಭಿನಂದಿಸುತ್ತದೆ.
ಪ್ರತಿ ಸರ್ಕಾರಿ ಶಾಲೆಗಳಿಗೆ ನಿರ್ವಹಣೆಗಾಗಿ ಅನುದಾನ ಅತಿ ಕಡಿಮೆ ಬರುತ್ತದೆ. ಇಂತಹ ಸಂದರ್ಭದಲ್ಲಿ ಶಾಲೆಯಲ್ಲಿನ ಕಂಪ್ಯೂಟರ್, ಸ್ಮಾರ್ಟ್ ಕ್ಲಾಸ್ ಹಾಗೂ ನಾನಾ ಸಂದರ್ಭಗಳಲ್ಲಿ ದಿನನಿತ್ಯ ವಿದ್ಯುತ್ ಬಳಕೆ ಹೆಚ್ಚಿರುತ್ತದೆ. ಪ್ರತಿ ತಿಂಗಳು ಹೆಸ್ಕಾಂದವರಿಗೆ ವಿದ್ಯುತ್ ಶುಲ್ಕ ಪಾವತಿ ಮಾಡುವುದೇ ಶಾಲೆಯ ಮುಖ್ಯಗುರುಗಳಿಗೆ ದೊಡ್ಡ ತಲೆನೋವಾಗಿತ್ತು.
ಕುಡಿಯುವ ನೀರು ಪೂರೈಕೆಗಾಗಿ ಸ್ಥಳೀಯ ಗ್ರಾಮ ಪಂಚಾಯ್ತಿಗೆ ಶಾಲಾ ಸಿಬ್ಬಂದಿ ಮೇಲಿಂದ ಮೇಲೆ ಮನವಿ ಮಾಡಬೇಕಿತ್ತು.
ಈಗ ಅದು ಕೂಡಾ ಉಚಿತವಾಗಿ ಪೂರೈಸಲು ಸರ್ಕಾರ ನಿರ್ಧರಿಸಿದೆ.
ಪ್ರತಿ ಮನೆಗೂ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳ ಹಿಂದೆ ಮುಜರಾಯಿ ಇಲಾಖೆಯ ದೇವಾಲಯಗಳಿಗೂ ಉಚಿತ ವಿದ್ಯುತ್ ಪೂರೈಕೆಯ ಪ್ರಸ್ತಾವನೆಯೂ ಬಂದಿದೆ. ಇಂತಹ ಸಂದರ್ಭದಲ್ಲಿ ಸಂಘ ಮಾಡಿದ ಮನವಿಗೆ ತಕ್ಷಣ ಸ್ಪಂದಿಸಿರುವ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ನಾಗೇಶ ಹಾಗೂ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ಅಭಿನಂದಿಸಿದ್ದಾರೆ.

