ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಠನೆ
ಸರ್ಕಾರದಿಂದ ಆಶ್ವಾಸನೆಗಳ ಈಡೇರಿಕೆ | ಎಚ್ಡಿಕೆಯಿಂದ ದ್ವೇಷಾಸೂಯೆ ರಾಜಕಾರಣ | ವಿದ್ಯುತ್ ಕಳವು ಮಾಡಿದವರಿಗೆ ಆರೋಪಿಸುವ ನೈತಿಕತೆಯಿಲ್ಲ
ಮೈಸೂರು: ಪ್ರತಿಪಕ್ಷದ ನಾಯಕರು ಯಾರಾದರೂ ನಮಗೆ ಅಭ್ಯಂತರವಿಲ್ಲ. ಜನರ ಆಶೀರ್ವಾದದಿಂದ ಸರ್ಕಾರ ರಚಿಸಿರುವ ನಮ್ಮ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿರುವ ಆಶ್ವಾಸನೆಗಳನ್ನು ಈಡೇರಿಸುತ್ತಿದೆ. ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದ್ವೇಷದ ರಾಜಕಾರಣ ಮಾಡದೇ, ಶಾಂತಿಯುತವಾದ ವಾತಾವರಣವನ್ನು ಸರ್ಕಾರ ನಿರ್ಮಿಸುತ್ತಿದೆ. ಬಿಜೆಪಿಯವರು ಸರ್ಕಾರದ ವಿರುದ್ಧ ಮಾಡುತ್ತಿರುವ ಭ್ರಷ್ಟಾಚಾರದ ಆರೋಪಗಳಿಗೆ ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಉತ್ತರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಚುನಾವಣೆ ನಡೆದರೂ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ಯಡಿಯೂರಪ್ಪನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಚುನಾವಣೆಯಲ್ಲಿ ಕೇವಲ 66 ಸೀಟು ಪಡೆದು ವಿರೋಧ ಪಕ್ಷದಲ್ಲಿ ಕುಳಿತಿದ್ದಾರೆ. ಅವರ ಮಗ ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದರಿಂದ ಅವರ ಪಕ್ಷದ ಅನೇಕ ನಾಯಕರು ಅಸಮಾಧಾನಗೊಂಡಿದ್ದಾರೆ. ಇನ್ನು ಸ್ಪಲ್ಪ ದಿನಗಳಲ್ಲಿ ಬಿಜೆಪಿಯ ಪರಿಸ್ಥಿತಿಯನ್ನು ಎಲ್ಲರೂ ನೋಡಬಹುದು ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಯವರು ವಿವೇಕಾನಂದ ಎಂಬುವವರ ವರ್ಗಾವಣೆ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ವಿವೇಕಾನಂದ ಎಂಬುವವರು ಮೈಸೂರು ಗ್ರಾಮಾಂತರ ಕ್ಷೇತ್ರಶಿಕ್ಷಣಾಧಿಕಾರಿಗಳಾಗಿದ್ದಾರೆ. ಅವರ ಬಗ್ಗೆ ಮಾತನಾಡಲಾಗಿದೆಯೆ ಹೊರತು ಪೋಲಿಸ್ ಅಧಿಕಾರಿ ಬಗ್ಗೆಯಲ್ಲ, ವಿವಿಪುರಂ ಇನ್ಸ್ ಪೆಕ್ಟರ್ ವಿವೇಕಾನಂದ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ, ವರ್ಗಾವಣೆಯಾಗಿರುವ ಬಗ್ಗೆ ಸ್ಥಳೀಯ ಶಾಸಕರನ್ನು ಕೇಳಲಿ ಎಂದರು.
ಕಾಂಗ್ರೆಸ್ ವಿರುದ್ಧ ಬಿಜೆಪಿ ಪೋಸ್ಟರ್ ಚಳವಳಿ ಪ್ರಾರಂಭಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜನ ಬಿಜೆಪಿಯವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಸೇರಿ ಸಮ್ಮಿಶ್ರ ಸರ್ಕಾರ ರಚಿಸುವ ಕನಸು ಕಂಡಿದ್ದರು. ಆದರೆ ಜನ ಕಾಂಗ್ರೆಸ್ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿರುವುದು ಅವರನ್ನು ಆತಂಕಕ್ಕೆ ದೂಡಿದ್ದು, ಇದರಿಂದ ಅರ್ಥವಿಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಕಾಂಗ್ರೆಸ್ ನವರು ಕೌರವ ಸಂಸ್ಕೃತಿಯನ್ನು ನನ್ನ ಬಳಿ ತೋರಿಸುವುದು ಬೇಡ ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಉತ್ತರಿಸುತ್ತಾ, ಕುಮಾರಸ್ವಾಮಿಯವರು ಎಂದಿಗೂ ತಾವು ಮಾಡಿರುವ ಆರೋಪಗಳನ್ನು ಸಾಬೀತು ಪಡಿಸಿಲ್ಲ. ದ್ವೇಷ ಹಾಗೂ ಅಸೂಯೆಯ ರಾಜಕಾರಣ ಮಾಡುತ್ತಿದ್ದಾರೆ. 38 ಸ್ಥಾನದಲ್ಲಿದ್ದ ಜೆಡಿಎಸ್ ನವರು ಈಗ 19 ಸ್ಥಾನಕ್ಕೆ ಇಳಿದಿದ್ದಾರೆ. ಅವರು ಮಾಡುವ ಸುಳ್ಳು ಆರೋಪಗಳಿಗೆ ಉತ್ತರ ನೀಡುವ ಅವಶ್ಯಕತೆ ಇಲ್ಲ ಎಂದರು.

