ವಿಶ್ವ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆಯಲ್ಲಿ ಹೆಚ್ಚುವರಿ ಎಸ್ಪಿ ಶಂಕರ ಮಾರಿಹಾಳ ಸ್ಪಷ್ಠನೆ
ವಿಜಯಪುರ: ಅನಧಿಕೃತವಾಗಿ ಮಕ್ಕಳನ್ನು ದತ್ತು ಪಡೆದುಕೊಳ್ಳುವುದು ಕಾನೂನು ಬಾಹಿರವಾಗಿದೆ. ಕಾನೂನು ಬದ್ಧವಾಗಿ ಅಗತ್ಯ ದಾಖಲಾತಿಗಳೊಂದಿಗೆ ದತ್ತು ಸ್ವೀಕಾರ ಕೇಂದ್ರ ಸಂಪರ್ಕಿಸಿ ದತ್ತು ಪಡೆದುಕೊಳ್ಳಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಾಗುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಭವನ, ಸರ್ಕಾರಿ ಮಕ್ಕಳ ಪಾಲನಾ ಸಂಸ್ಥೆಗಳು ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಹಯೋಗದಲ್ಲಿ ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾದ ಅಂತರರಾಷ್ಟ್ರೀಯ ದತ್ತು ಮಾಸಾಚರಣೆ ಮತ್ತು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಪಂಡಿತ ಜವಾಹರಲಾಲ ನೆಹರು ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ಪೋಷಕರ ಜವಾಬ್ದಾರಿ. ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ತೊಡಗಿಸಿಕೊಳ್ಳುವಂತೆ ನೋಡಿಕೊಳ್ಳಬೇಕು. ಸೃಜನಾತ್ಮಕ ಚಟುವಟಿಕೆಗಳಲ್ಲಿ ಹೆಚ್ಚೆಚ್ಚು ಪಾಲ್ಗೊಳ್ಳಬೇಕು. ಮಕ್ಕಳ ಸುಂದರ ಬಾಲ್ಯವನ್ನು ರೂಪಿಸುವ ಹೊಣೆ ಪ್ರತಿ ಪೋಷಕ-ಪಾಲಕರ ಜವಾಬ್ದಾರಿಯಾಗಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಅವರಿಗೆ ದೇಶದ ಆಸ್ತಿಯನ್ನಾಗಿಸಬೇಕು. ಶಿಕ್ಷಣದೊಂದಿಗೆ ಸಂಸ್ಕಾರ ನೀಡಬೇಕು. ದೇಶದ ಸಂಪದ್ಭರಿತ ಸಂಸ್ಕೃತಿ ಹಿರಿಮೆ ಗರಿಮೆ ಕುರಿತು ಬಾಲ್ಯದಿಂದಲೇ ಮಕ್ಕಳಲ್ಲಿ ಬೆಳೆಸಬೇಕು ಎಂದು ಹೇಳಿದರು.
ಕಾನೂನಾತ್ಮಕ ದತ್ತು ಪ್ರಕ್ರಿಯೆ ಸಾರ್ವಜನಿಕರು ತಿಳಿದುಕೊಳ್ಳುವುದು ಅತ್ಯವಶ್ಯಕವಾಗಿದೆ. ಬಾಲ ನ್ಯಾಯ ಕಾಯ್ದೆ ೨೦೧೫ ಸೆಕ್ಷನ್ ೮೧ರನ್ವಯ ೫ ವರ್ಷಗಳವರೆಗೆ ಸೆರೆಮನೆ ವಾಸದೊಂದಿಗೆ ಒಂದು ಲಕ್ಷ ರೂ.ವರೆಗೆ ದಂಡ ವಿಧಿಸಬಹುದಾಗಿದೆ. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾಗಿದ್ದಲ್ಲಿ ಶಿಕ್ಷೆಯ ಅವಧಿ ೩ ವರ್ಷಗಳಿಗೆ ಕಡಿಮೆ ಇಲ್ಲದಂತೆ ೭ ವರ್ಷಗಳವರೆಗೆ ವಿಸ್ತರಣೆ ಮಾಡಬಹುದಾಗಿದ್ದು, ಕಾನೂನು ಬಾಹಿರವಾಗಿ ಮಕ್ಕಳನ್ನು ಸಾಕಿಕೊಳ್ಳುವುದು ಅಥವಾ ಮಾರಾಟ ಮಾಡುವುದು ಕಂಡು ಬಂದಲ್ಲಿ ೧೦೯೮ ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ಒದಗಿಸುವಂತೆ ಅವರು ಮನವಿ ಮಾಡಿಕೊಂಡರು.
ಈ ಸಂದರ್ಭದಲ್ಲಿ ಇಂಡಿಯಾ ವರ್ಲ್ಡ ರೆಕಾರ್ಡ್ ಪ್ರಶಸ್ತಿ ಪಡೆದ ಯಂಗ್ ಸೂಪರ್ ಟ್ಯಾಲೆಂಟೆಡ್ ಧಿತಿ ಹಣಮಂತ ಶಿರಶ್ಯಾಡ ಅವರಿಗೆ ಸನ್ಮಾನಿಸಲಾಯಿತು. ೨೦೨೩ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಹಾಗೂ ೨೦೨೨-೨೩ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಬಾಲಮಂದಿರದ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ಪ್ರಶಸ್ತಿ ನೀಡಲಾಯಿತು.
ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಎಸ್.ಜಿ.ಖೈನೂರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ವಿಕಲಚೇತನರ ಅಧಿಕಾರಿ ರಾಜಶೇಖರ ಧೈವಾಡಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಶ್ರೀಧರ ಕುಲಕರ್ಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಬಸವರಾಜ ಜಗಳೂರ, ವಿಜಯಪುರ ಗ್ರಾಮೀಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಮ್ಯಾಗೇರಿ, ನಗರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಾದ ದೀಪಾಕ್ಷಿ ಜಾನಕಿ, ಚಡಚಣ ಶಿಶು ಅಭಿವೃದ್ದಿ ಯೋಜನಾಧಿಕಾರಿ ಅನೀಲ, ಮುದ್ದೇಬಿಹಾಳ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಉಪಸ್ಥಿತರಿದ್ದರು.

