ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಅಭಿಮತ
ಮುದ್ದೇಬಿಹಾಳ: ಸಂವಿಧಾನ ದಿನಾಚರಣೆಯ ದಿನದಂದು ಮಾತ್ರ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮತ್ತು ಸಂವಿಧಾನಕ್ಕೆ ಗೌರವಿಸದೇ, ಪ್ರತಿಯೊಬ್ಬ ಭಾರತೀಯ ತಮ್ಮ ಆತ್ಮದಲ್ಲಿ ಉಸಿರು ಇರುವವರೆಗೂ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳಬಾರದು. ಅಂದಾಗ ಮಾತ್ರ ನಮ್ಮ ದೇಶದಲ್ಲಿ ಜಾತಿ ವ್ಯವಸ್ಥೆ ಸಂಪೂರ್ಣವಾಗಿ ನಿರ್ಮೂಲನೆಯಾಗಿ ಸಮಾನತೆ ಕಾಣಲು ಸಾಧ್ಯ ಎಂದು ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಂಪತ್ತಕುಮಾರ ಬಳೂಳಗಿಡದ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಜ್ಞಾವಿಧಿ ಬೋಧಿಸಿ ಅವರು ಮಾತನಾಡಿದರು.
ಸ್ವತಂತ್ರಪೂರ್ವ ಭಾರತದಲ್ಲಿ ಜಾತೀಯತೆ, ಅಸ್ಪೃಶ್ಯತೆ ತಾಂಡವವಾಡುತ್ತಿತ್ತು. ಸಂವಿಧಾನ ಸಮರ್ಪಣೆಯಾದ ನಂತರ ಕ್ರಮೇಣ ಕಡಿಮೆಯಾಗುತ್ತಾ ಬಂದಿದೆ. ಸಂವಿದಾನವನ್ನು ಪ್ರತಿಯೊಬ್ಬ ಜಾತಿ ಜನಾಂಗದವರೂ ಅಪ್ಪಿಕೊಳ್ಳುವಂಥದ್ದು. ಬಾರತದ ಪ್ರತಿಯೊಬ್ಬ ಪ್ರಜೆಯೂ ದೇಶಾಭಿಮಾನ, ಸೈನಿಕಾಭಿಮಾನ ಮತ್ತು ಸಂವಿಧಾನಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.
ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮತ್ತು ಹಿರಿಯ ನ್ಯಾಯವಾದಿ ಎಂ.ಎಚ್.ಹಾಲಣ್ಣವವರ ಮಾತನಾಡಿದರು.
ವಿಶೇಶ ಉಪನ್ಯಾಸ ನೀಡದ ಎನ್.ಆರ್.ಮೊಕಾಶಿ ವಕೀಲರು ಜಾತಿ ಎಂಬ ಕನ್ನಡಕ ಕಳಚಿದಾಗ ಮಾತ್ರ ಅಂಬೇಡ್ಕರ್ ಅವರ ಸಾಧನೆಯ ಬಗ್ಗೆ ಅರ್ಥೈಸಿಕೊಳ್ಳಲು ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ನ್ಯಾಯಾಧೀಶ ಬಳೂಲಗಿಡದರು ಭಕ್ತಿಯಿಂದ ಪೂಜಿಸಿದರು.
ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಹಿರಿಯ ನ್ಯಾಯವಾದಿಗಳಾದ ಜೆ.ಚಿನಿವಾರ, ಆರ್.ಬಿ.ಪಾಟೀಲ, ಬಿ.ಆರ್.ನಾಡಗೌಡರ, ನ್ಯಾ.ಸಂಘದ ಉಪಾಧ್ಯಕ್ಷ ಎಚ್.ಜಿ.ನಾಗೋಡ ಸೇರಿದಂತೆ ನ್ಯಾಯಾಲಯದ ಸಿಬ್ಬಂದಿ ಭಾಗಿಯಾಗಿದ್ದರು.
ಸಂಘದ ಪ್ರ.ಕಾರ್ಯದರ್ಶಿ ಪಿ.ಬಿ.ಗೌಡರ ಕಾರ್ಯಕ್ರಮ ನಿರ್ವಹಿಸಿದರು.

