ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಪೈಪೋಟಿ | ಸಾರ್ವತ್ರಿಕ ಚುನಾವಣೆಯ ಸೆಮಿಫೈನಲ್ | ಬಿಜೆಪಿ, ಕಾಂಗ್ರೆಸ್ ಗೆ ಅಗ್ನಿ ಪರೀಕ್ಷೆ
ಬೆಂಗಳೂರು: ಇನ್ನು ಕೆಲವೇ ತಿಂಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಸೆಮಿಫೈನಲ್ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್ಗಢ ಮತ್ತು ತೆಲಂಗಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಭಾನುವಾರ ಪ್ರಕಟವಾಗಲಿದೆ.
ರಾಜಸ್ಥಾನ ಮತ್ತು ಛತ್ತೀಸ್ಗಢದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಮತ್ತು ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ನಡುವೆ ಈ ಮೂರು ರಾಜ್ಯಗಳಲ್ಲಿ ನೇರ ಹಣಾಹಣಿ ಇದೆ. ತೆಲಂಗಾಣದಲ್ಲಿ ಕೆ ಚಂದ್ರಶೇಖರ್ ರಾವ್ ನೇತೃತ್ವದ ಭಾರತ್ ರಾಷ್ಟ್ರ ಸಮಿತಿ(ಬಿಆರ್ಎಸ್) ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ.
ತೆಲಂಗಾಣ ಮತ್ತು ಛತ್ತೀಸ್ಗಢದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ಭವಿಷ್ಯ ನುಡಿದಿದ್ದು, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ ಎಂದು ಹೇಳಿವೆ.
ಮಧ್ಯಪ್ರದೇಶದ 230, ಛತ್ತೀಸ್ಗಢದ 90, ತೆಲಂಗಾಣದ 119 ಮತ್ತು ರಾಜಸ್ಥಾನದ 199 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, ಭಾನುವಾರ ಬೆಳಗ್ಗೆ 8 ಗಂಟೆಗೆ ಬಿಗಿ ಭದ್ರತೆಯ ನಡುವೆ ಅಂಚೆ ಮತಪತ್ರಗಳ ಎಣಿಸುವ ಮೂಲಕ ಮತ ಎಣಿಕೆ ಆರಂಭವಾಗಲಿದೆ. ಅಭ್ಯರ್ಥಿ ಸಾವನ್ನಪ್ಪಿದ ಕಾರಣ ರಾಜಸ್ಥಾನದಲ್ಲಿ ಒಂದು ಕ್ಷೇತ್ರದ ಮತದಾನವನ್ನು ಮುಂದೂಡಲಾಗಿದೆ.
ಮತ ಎಣಿಕೆಗೆ ಮೂರು ಹಂತದ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಪಾಸ್ ಹೊಂದಿರುವವರಿಗೆ ಮಾತ್ರ ಮತ ಎಣಿಕೆ ಕೇಂದ್ರಗಳಿಗೆ ಪ್ರವೇಶ ನೀಡಲಾಗುವುದು ಎಂದು ಚುನಾವಣಾಧಿಕಾರಿಗಳು ತಿಳಿಸಿದ್ದಾರೆ.

