ವರದಿ ಪರಿಣಾಮ: ಸ್ವಯಂ ಪ್ರೇರಿತ ಪ್ರಕರಣ ದಾಖಲು
ಕ್ರಮಕ್ಕೆ ಮುಂದಾದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ
ಮುದ್ದೇಬಿಹಾಳ: ಇತ್ತೀಚೆಗೆ ತಾಲೂಕಿನ ಬಿದರಕುಂದಿ ಗ್ರಾಮದ ಸರ್ಕಾರಿ ಮಾದರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮವನ್ನು ಸರಿಯಾಗಿ ನಿರ್ವಹಿಸದೇ ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದಿದ್ದವು. ಈ ಕುರಿತು ’ಉದಯರಶ್ಮಿ’ ಪತ್ರಿಕೆಯಲ್ಲಿ “ಅವ್ಯವಸ್ಥೆಯ ಆಗರವಾದ ಪ್ರತಿಭಾ ಕಾರಂಜಿ :ಆಕ್ರೋಶ” ಎಂಬ ಶೀರ್ಷಿಕೆಯಡಿ ಸುದ್ದಿ ಪ್ರಕಟಿಸಿತ್ತು.
ವಿದ್ಯಾರ್ಥಿಗಳಿಗೆ ಸರಿಯಾದ ಟೆಂಟ್ ವ್ಯವಸ್ಥೆ ಇಲ್ಲದೇ ಮಕ್ಕಳು ಬಿಸಿಲಿನ ತಾಪಕ್ಕೆ ತಲೆ ತಿರುಗಿ ಬಿದ್ದಿರುವ, ಸಮರ್ಪಕವಾದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದ ಬಗ್ಗೆ, ಸಮರ್ಪಕ ಶೌಚಾಲಯಗಳಿಲ್ಲದ ಬಗೆಗಿನ ಅಂಶಗಳನ್ನು ವಿವರಿಸಿ ಅಧಿಕಾರಿಗಳ ಗಮನ ಸೆಳೆಯಲಾಗಿತ್ತು.
ವರದಿ ಗಮನಿಸಿದ ಕರ್ನಾಟಕ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ. ಅಲ್ಲದೇ ವಿಜಯಪುರದ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸದರಿ ಕಾರ್ಯಕ್ರಮದ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಕಲೆ ಹಾಕಿ ಕಾರ್ಯಕ್ರಮದಲ್ಲಿ ಭಾಗವಹಿಸಿದವರ ಹೇಳಿಕೆ ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚಿಸಿ ಲೋಪದೋಷಗಳು ಕಂಡು ಬಂದಲ್ಲಿ ಇಲಾಖೆಯ ನಿಯಮಾನುಸಾರ ಇತ್ಯರ್ಥಕ್ಕೆ ಒಳಪಡಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಏಳು ದಿನಗಳ ಒಳಗಾಗಿ ಸಲ್ಲಿಸುವಂತೆ ತಿಳಿಸಿದೆ.

