ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ ಶಿಂಧೆ ಅಭಿಮತ
ವಿಜಯಪುರ: ಗ್ರಾಮಗಳ ಅಭಿವೃದ್ಧಿಯಲ್ಲಿ ಗ್ರಾಮಸ್ಥರ ಸಹಕಾರ ಅತಿಮುಖ್ಯವಾಗಿದ್ದು, ಗ್ರಾಮಸ್ಥರು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಅಗತ್ಯ ಸಹಕಾರ ನೀಡುವ ಗ್ರಾಮ ಪಂಚಾಯತಿ ಅಭಿವೃದ್ಧಿಗೆ ಕೈಜೋಡಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಮನವಿ ಮಾಡಿಕೊಂಡರು.
ಶುಕ್ರವಾರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕಣಕಾಲ & ಮುತ್ತಗಿ ಗ್ರಾಮಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದ ಅವರು, ಕಣಕಾಲ ಗ್ರಾಮದಲ್ಲಿ ಸರಕಾರಿ ಜಾಗ ಅತಿಕ್ರಮಣವಾಗಿರುವ ಕುರಿತು ಗ್ರಾಮಸ್ಥರೊಂದಿಗೆ ಚರ್ಚಿಸಿದ ಅವರು, ಅತಿಕ್ರಮಣವಾಗಿದೆ ಎನ್ನಲಾದ ಸ್ಥಳದಲ್ಲಿ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದು, ನಮಗೆ ಇಲ್ಲೇ ವಾಸಿಸಲು ಅವಕಾಶ ನೀಡಲು ಗ್ರಾಮಸ್ಥರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಅವರು ಈ ವಿಷಯದ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಗ್ರಾಮದ ಶಿಶು ಪಾಲನಾ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳೊಡನೆ ಮಾತನಾಡಿದರು.
ಗ್ರಾಮಸ್ಥರ ಮನವಿಯನುಸಾರ ಗ್ರಾಮದ ಆರೋಗ್ಯ ಕೇಂದ್ರಕ್ಕೆ ನಿಯಮಾನುಸಾರ ಸಮುದಾಯ ಆರೋಗ್ಯ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ದುರಸ್ಥಿಯಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ತುರ್ತಾಗಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ದುರಸ್ತಿಗೊಳಿಸಿ, ಜನರಿಗೆ ನೀರು ಬಳಸಲು ಅವಕಾಶ ಕಲ್ಪಿಸಲು ಸ್ಥಳದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ಮುತ್ತಗಿ ಗ್ರಾಮಕ್ಕೆ ಭೇಟಿ ನೀಡಿದ ಅವರು ಪ್ರಗತಿಯಲ್ಲಿರುವ ರಾಜೀವ ಗಾಂಧಿ ಸೇವಾ ಕೇಂದ್ರದ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ವಹಿಸಲು ಮತ್ತು ತುರ್ತಾಗಿ ಕಾಮಗಾರಿಯನ್ನು ಪೂರ್ಣಗೊಳಿಸಲು ತಿಳಿಸಿದರು. ನಂತರ ಗ್ರಾಮ ಪಂಚಾಯತಿಗೆ ಭೇಟಿ ನೀಡಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯತಿಯಲ್ಲಿ ಅನುಮೋದನೆಗೆ ಬಾಕಿಯಿರುವ ಸಿಬ್ಬಂದಿಗಳು ಅರ್ಹವಿದ್ದಲ್ಲಿ ಅಂತಹವರ ವಿವರವನ್ನು ಅನುಮೋದನೆಗಾಗಿ ಜಿಲ್ಲಾ ಪಂಚಾಯತಿಗೆ ಸಲ್ಲಿಸಲು ತಾಲೂಕು ಪಂಚಾಯತಿ ಸಹಾಯಕ ನಿರ್ದೇಶಕರು (ಪಂರಾ) ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ವಿಜಯಕುಮಾರ ಆಜೂರ, ಸಹಾಯಕ ಯೋಜನಾಧಿಕಾರಿ ಅರುಣಕುಮಾರ ದಳವಾಯಿ, ದೇವರಹಿಪ್ಪರಗಿ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಮತಿ ಭಾರತಿ ಚೆಲುವಯ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಶರಣಮ್ಮ ಕುಂಬಾರ ಬಸವನಬಾಗೇವಾಡಿ ತಾಲೂಕಾ ಪಂಚಾಯತ್ ಸಹಾಯಕ ನಿರ್ದೇಶಕ ಪ್ರಕಾಶ ದೇಸಾಯಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಸದಸ್ಯರು, ಸೇರಿದಂತೆ ಜಿಪಂ ಮತ್ತು ಇತರೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

