ಸಿಂದಗಿ-ದೇವರಹಿಪ್ಪರಗಿ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ್ ಶಿಂಧೆ
ವಿಜಯಪುರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಬುಧವಾರ ಸಿಂದಗಿ ಹಾಗೂ ದೇವರಹಿಪ್ಪರಗಿಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಕುಡಿಯುವ ನೀರಿನ ಕಾಮಗಾರಿ, ನರೇಗಾ, ಅಂಗನವಾಡಿ ಕೇಂದ್ರಗಳ ಕಾರ್ಯನಿರ್ವಹಣೆ, ವಿವಿಧ ಶಾಲೆಗಳಲ್ಲಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಸಿಂದಗಿ ತಾಲೂಕಿನ ಕೊಕಟನೂರ ಗ್ರಾಮಕ್ಕೆ ಭೇಟಿ ನೀಡಿದ ಅವರು ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಶಿಶು ಪಾಲನಾ ಕೇಂದ್ರವನ್ನು (ಕೂಸಿನ ಮನೆ) ಉದ್ಘಾಟನೆ ಮಾಡಿದರು.
ನಂತರ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ಕೆಲಸ ನಿರ್ವಹಿಸುವ ಕೂಲಿಕಾರರು ಮತ್ತು ನರೇಗಾ ಯೋಜನೆಯಡಿ ಕೆಲಸ ನಿರ್ವಹಿಸುವ ಕೂಲಿಕಾರರು ತಮ್ಮ ಮಕ್ಕಳನ್ನು ಶಿಶುಪಾಲನಾ ಕೇಂದ್ರದಲ್ಲಿ ಬಿಟ್ಟು, ನಿಶ್ಚಿಂತೆಯಿಂದ ಕೆಲಸಕ್ಕೆ ಹೋಗಬಹುದು. ನಿಮ್ಮ ಮಕ್ಕಳ ಸಂಪೂರ್ಣ ಜವಾಬ್ದಾರಿಯನ್ನು ಸರಕಾರ ತನ್ನ ಮಡಿಲಿಗೆ ಹಾಕಿಕೊಂಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.
ಕೇಂದ್ರದಲ್ಲಿರುವ ಮಕ್ಕಳನ್ನು ಪ್ರೀತಿಯಿಂದ, ಸೇವಾಮನೋಭಾವದಿಂದ ನೋಡಿಕೊಳ್ಳುವಂತೆ ಆರೈಕೆದಾರರಿಗೆ ಸೂಚಿಸಿದರು. ಪ್ರಸ್ತುತ ಕೇವಲ ೯ ಮಕ್ಕಳು ನೋಂದಣಿಯಾಗಿದ್ದು, ಮುಂದಿನ ದಿನದಲ್ಲಿ ಜನರಿಗೆ ಈ ಕೇಂದ್ರದ ಕುರಿತು ಜಾಗೃತಿ ಮೂಡಿಸಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಿದರು.
ನಂತರ ಕೊಕಟನೂರ ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-೧ ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾಗಿ ಶಾಲಾ ಪೂರ್ವ ಶಿಕ್ಷಣ ನೀಡಬೇಕು. ಕೇಂದ್ರದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಅಂಗನವಾಡಿ ಮೇಲ್ವಿಚಾರಕರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಸೂಚಿಸಿದರು.
ನಂತರ ದೇವರ ಹಿಪ್ಪರಗಿ ತಾಲೂಕಿನ ಕೊರವಾರ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ಸಿಬ್ಬಂದಿಗಳ ಹಾಜರಾತಿ ಮತ್ತು ವಿವಿಧ ಯೋಜನೆಗಳ ದಾಖಲಾತಿಗಳನ್ನು ಪರಿಶೀಲನೆ ಮಾಡಿದರು. ಈ ಸಮಯದಲ್ಲಿ ಸಿಬ್ಬಂದಿಗಳಿಗೆ ಸಮಯಕ್ಕನುಸಾರವಾಗಿ ಕೆಲಸಕ್ಕೆ ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಿದರು. ಸಾರ್ವಜನಿಕರಿಂದ ಯಾವದೇ ರೀತಿಯ ದೂರು ಸ್ವೀಕೃತ್ತವಾಗದಂತೆ ಕೆಲಸ ನಿರ್ವಹಿಸಲು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ನಂತರ ಗ್ರಾಮದಲ್ಲಿರುವ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಿಬ್ಬಂದಿಗಳ ಹಾಜರಾತಿ, ವಿವಿಧ ವಿಭಾಗಗಳನ್ನು ವೀಕ್ಷಿಸಿ, ಆಸ್ಪತ್ರೆಯಲ್ಲಿ ಸ್ವಚ್ಛತೆ ಕಾಪಾಡುವ ಜೊತೆಗೆ ಆಸ್ಪತ್ರೆಗೆ ಬರುವ ಸಾರ್ವಜನಿಕರಿಗೆ ಉತ್ತಮವಾದ ಸೇವೆ ನೀಡಲು ವೈಧ್ಯಾಧಿಕಾರಿಗಳಿಗೆ ತಿಳಿಸಿದರು. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸುವ ವೈಧ್ಯರ ಮತ್ತು ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ತಾಲೂಕು ವೈಧ್ಯಾಧಿಕಾರಿಗಳಿಗೆ ಸೂಚಿಸಿದರು.
ನಂತರ ಗ್ರಾಮದ ಹೊರವಲಯದ ಜಲಧಾರೆ ಯೋಜನೆಯ ಸ್ಟಾಕ್ ಯಾರ್ಡ್ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ಮಾಡಿದರು. ಅಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಜಿನಿಯರ್ ರಿಂದ ಯೋಜನೆಯ ಕುರಿತು ಮಾಹಿತಿ ಪಡೆದುಕೊಂಡರು. ಸ್ಥಳದಲ್ಲಿದ್ದ ಎಂ.ಎಸ್. ಪೈಪ್, ಡಿಐ ಪೈಪ್, ಹಾಗೂ ಎಚ್ಡಿಪಿಇ ಎಂ.ಎಸ್.ಪೈಪ್ ಗಳಿಗೆ ಸಿಮೆಂಟ್ ಪರದೆ ಮಾಡುವ ಕೆಲಸವನ್ನು ಪರಿಶೀಲನೆ ಮಾಡಿ, ಕಾಮಗಾರಿಯನ್ನು ಗುಣಮಟ್ಟದಿಂದ ಮತ್ತು ನಿಗದಿತ ಸಮಯದೊಳಗೆ ಪೂರ್ಣಗೊಳಿಸಲು ತಿಳಿಸಿದರು.
ನಂತರ ನರೇಗಾ ಕೂಲಿ ಕೆಲಸಕ್ಕೆ ಬರುವಂತೆ ಸಾರ್ವಜನಿಕರಿಗೆ ಮಾಹಿತಿ ನೀಡಿ ನಮೂನೆ ೬ನ್ನು ವಿತರಣೆ ಮಾಡಿದರು. ಇದಾದ ನಂತರ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಕ್ಕಳ ಜೊತೆ ಪಠ್ಯ ವಿಷಯಗಳ ಕುರಿತು ಚರ್ಚೆ ನಡೆಸಿದರು. ಶಾಲೆಯಲ್ಲಿರುವ ಸೌಲಭ್ಯಗಳ ಕುರಿತು, ಕುಡಿಯುವ ನೀರು, ಶೌಚಾಲಯ, ಬಿಸಿಯೂಟದ ಕುರಿತು ಹೀಗೆ ವಿವಿಧ ವಿಷಯಗಳ ಕುರಿತು ಮಕ್ಕಳೊಂದಿಗೆ ಚರ್ಚೆ ನಡೆಸಿದರು.
ನಂತರ ಸಿಂದಗಿ ತಾಲೂಕು ಪಂಚಾಯತಿ ಸಭಾಭವನದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿಗಳಾದ ನಿಂಗಪ್ಪ ಗೋಠೆ, ಸಿಂದಗಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಮು ಜಿ ಅಗ್ನಿ, ಸಹಾಯಕ ನಿರ್ದೇಶಕರಾದ ನಿತ್ಯಾನಂದ ಯಲಗೋಡ, ಪಿಆರ್ಇಡಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಮ್.ಎಸ್. ಮುರಾಳ, ಸಿಡಿಪಿಒ ಶಂಭುಲಿಂಗ ಹಿರೇಮಠ, ಬಿಇಓ ಆರಿಫ್ ಬಿರಾದಾರ, ಕೃಷಿ ಸಹಾಯಕ ನಿರ್ದೇಶಕ ಎಚ್.ವಾಯ್. ಸಿಂಗೇಗೋಳ, ತೋಟಗಾರಿಕೆ ಸಹಾಯಕ ನಿರ್ದೇಶಕ ರಾಘವೇಂದ್ರ ಬಗಲಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

