ಯಶಸ್ವಿಗೆ ಶ್ರಮಿಸಿದ ವೈದ್ಯಾಧಿಕಾರಿಗಳಿಗೆ, ತಾಲೂಕು ಆರೋಗ್ಯಾಧಿಕಾರಿಗಳಿಗೆ ಜಿಪಂ ಸಿಇಓ ರಾಹುಲ್ ಶಿಂಧೆ ಸನ್ಮಾನ
ವಿಜಯಪುರ: ಜಿಲ್ಲೆಯ ಆರ್.ಬಿ.ಎಸ್.ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಮಾದರಿಯಾಗಿದೆ. ಹೆಮ್ಮೆ ಪಡುವಂತಹ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ. ಮುಂಬರುವ ದಿನಗಳಲ್ಲಿ ತಾವೆಲ್ಲರೂ ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ಡಿ.೧೨ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನಿತರಿಗೆ ಗೌರವಿಸಿ ಅವರು ಮಾತನಾಡಿದರು. ಅನಾರೋಗ್ಯಕ್ಕೆ ಒಳಗಾದ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಔಷಧೋಪಚಾರ ಮತ್ತು ಸಮಾಲೋಚನೆ ಮೂಲಕ ಚಿಕಿತ್ಸಾ ಪರಿಹಾರ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಸಂಬಂಧಪಡುವ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸದ್ಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನೇಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ರಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರಕ್ತ ಹೀನತೆಯಿಂದ ಬಳಲುವ ಮಕ್ಕಳಿಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಅನುಕೂಲವಿರುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಅಧಿಕಾರಿಗಳಿ ಸೂಚಿಸಿದರು.
ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ೧೮ದೊಳಗಿನ ಮಕ್ಕಳಿಗೆ ಜಿಲ್ಲೆಯಾದ್ಯಂತ ಫೆಬ್ರವರಿ-೨೦೨೨ ರಿಂದ ಈವರೆಗೆ ೧೨,೯೨,೬೦೨ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈ ಪೈಕಿ ೫೯,೯೪೨ ವಿವಿಧ ಆರೋಗ್ಯ ಸಮಸ್ಯೆಯಿರುವ ಮಕ್ಕಳಿದ್ದು,ಇದರಲ್ಲಿ ೯೧೨ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದ್ದು, ೧೮೯ ಮಕ್ಕಳಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ, ೩೫ ಮಕ್ಕಳಿಗೆ ಕಣ್ಣಿನ ಚಿಕಿತ್ಸೆ, ೨೬ ಮಕ್ಕಳಿಗೆ ಸೀಳು ತುಟಿ ಚಿಕಿತ್ಸೆ ಮತ್ತು ಇತರೆ ಆರೋಗ್ಯ ಸಮಸ್ಯೆ ಹೊಂದಿರುವ ೬೬೨ ಮಕ್ಕಳಿಗೆ ಆರ್.ಬಿ.ಎಸ್.ಕೆ ಹಾಗೂ ಎ.ಬಿ.ಎ.ಆರ್.ಕೆ ಕಾರ್ಯಕ್ರಮದಡಿ ಉಚಿತ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಅವಶ್ಯಕತೆ ಅನುಸಾರ ವಿಜಯಪುರದ ಬಿ.ಎಲ್.ಡಿ.ಇ, ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗಳಿಗೆ ಹಾಗೂ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರ್.ಸಿ.ಎಚ್ ಅಧಿಕಾರಿಗಳಾದ ಡಾ.ಕೆ.ಡಿ.ಗುಂಡಬಾವಡಿ ಮಾಹಿತಿ ಒದಗಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶರಾದ ಡಾ.ಸಿ.ಕೆ ಹೊಸಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕವಿತಾ ದೊಡಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಂಲಗಿ,ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ, ತಾಲೂಕಿನ ಎಲ್ಲ ಬಿ.ಇ.ಒ, ಸಿಡಿಪಿಓ, ಟಿ.ಎಚ್.ಓ ಅವರು ಉಪಸ್ಥಿತರಿದ್ದರು.

