ವಿಜಯಪುರ: ಕೃಷಿ ಇಲಾಖೆಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳದ ಅಂಗವಾಗಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಡಿ.೧೪ ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ್ ಸ್ಪರ್ಧೆ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಜಂಟಿ ಕೃಷಿ ನಿರ್ದೇಶಕ ಡಾ.ರಾಜಶೇಖರ ವಿಲಿಯಮ್ಸ್ ಉದ್ಘಾಟಿಸಿ ಮಾತನಾಡಿ, ಇತ್ತೀಚಿನ ಆಧುನಿಕ ಜೀವನ ಶೈಲಿಯಿಂದಾಗಿ ಜನರ ಪಾರಂಪರಿಕ ಆಹಾರ ಪದ್ಧತಿ ಬದಲಾವಣೆ ಹೊಂದಿ ಹಲವಾರು ಕಾಯಿಲೆಗಳು ಜನರು ತುತ್ತಾಗುತ್ತಿದ್ದಾರೆ. ಈ ಎಲ್ಲ ಕಾಯಿಲೆಗಳಿಗೆ ಸಿರಿಧಾನ್ಯಗಳ ಸೇವನೆ ರಾಮಬಾಣವಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಿರಿ ಧಾನ್ಯಗಳ ಬೇಸಾಯ ಹಾಗೂ ಸೇವನೆಗೆ ಒತ್ತು ನೀಡಿದ್ದು, ಪ್ರಸಕ್ತ ೨೦೨೩ನೇ ವರ್ಷವನ್ನು ಅಂತರರಾಷ್ಟ್ರೀಯ ಸಿರಿಧಾನ್ಯಗಳ ವರ್ಷವೆಂದು ಘೋಷಿಸಿದೆ ಎಂದು ಹೇಳಿದರು.
ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಯಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು, ಸಿರಿಧಾನ್ಯಗಳ ಬೇಸಾಯ ಮತ್ತು ಸೇವನೆಗೆ ಪ್ರೊತ್ಸಾಹಿಸಲು ಬರುವ ಜನವರಿ ಮೊದಲನೇ ವಾರದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-೨೦೨೪ ಹಮ್ಮಿಕೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರೈತರು ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಮಟ್ಟದ ಸಿರಿಧಾನ್ಯ ಪಾಕ್ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಮಹಿಳೆಯರು ಭಾಗವಹಿಸಿದ್ದರು.
ಸಿಹಿ ತಿಂಡಿ ವಿಭಾಗದಲ್ಲಿ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಶ್ರೀಮತಿ ಪುಷ್ಪಾ ಜಿಗಜಿನ್ನಿ ಮತ್ತು ಖಾರದ ತಿಂಡಿ ವಿಭಾಗದಲ್ಲಿ ಚಡಚಣ ತಾಲೂಕಿನ ಲೋಣಿ ಬಿ.ಕೆ. ಗ್ರಾಮದ ಶ್ರೀಮತಿ ಪದ್ಮಾ ಕಲ್ಯಾಣಶೆಟ್ಟಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾದರು. ಕೃಷಿ ಮಹಾವಿದ್ಯಾಲಯದ ಪ್ರಾಧ್ಯಾಪಕಿ ಡಾ.ಕಾಶಿಬಾಯಿ ಖೇಡಗಿ ಮತ್ತು ಆತ್ಮ ಯೋಜನೆಯ ಉಪ ಯೋಜನಾ ನಿರ್ದೇಶಕ ಡಾ.ಎಂ.ಬಿ.ಪಟ್ಟಣಶೆಟ್ಟಿ ತೀರ್ಪುಗಾರರಾಗಿ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಉಪ ಕೃಷಿ ನಿರ್ದೇಶಕ ಪ್ರಕಾಶ ಚವ್ಹಾಣ, ಚಂದ್ರಕಾಂತ ಪವಾರ, ಬಾಲರಾಜ್, ಸಹಾಯಕ ಕೃಷಿ ನಿರ್ದೇಶಕರುಗಳಾದ ಶ್ರೀಮತಿ ಯಾಸ್ಮಿನ್ ಠಾಣೆದಾರ, ಶ್ರೀಮತಿ ವಿಜಯಲಕ್ಷ್ಮಿ ಚವ್ಹಾಣ ಮತ್ತು ಇತರ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

