ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವಿಶೇಷ ಘಟಕ ಯೋಜನೆಯಡಿ ಡಿ.೧೬ ರಂದು ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಅಂದು ಸಂಜೆ ೫-೦೦ಗಂಟೆಗೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಮೆರವಣಿಗೆ ನಡೆಯಲಿದೆ. ಸಂಜೆ ೬-೦೦ಕ್ಕೆ ಜರುಗುವ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಉಕ್ಕಲಿಯ ಯಮನಪ್ಪ ಭಜಂತ್ರಿ ಅವರಿಂದ ಶಹನಾಯಿ ವಾದನ, ದೇವರಹಿಪ್ಪರಗಿಯ ಕುಮಾರಿ ಶೃತಿ ಮೇಲಿನಮನೆ ಅವರಿಂದ ಸುಗಮ ಸಂಗೀತ, ವಿಜಯಪುರದ ಶ್ರೀಮತಿ ಪಲ್ಲವಿ ವೇದಂಡೆ ಮತ್ತು ಸಂಗಡಿಗರಿಂದ ಸಮೂಹ ನೃತ್ಯ, ದೇವರಹಿಪ್ಪರಗಿಯ ರಾವುತ್ ಎಸ್. ತಳಕೇರಿ ಅವರಿಂದ ಕ್ರಾಂತಿಗೀತೆಗಳು, ವಿಜಯಪುರ ಜಿಲ್ಲೆಯ ಎಸ್.ಕೆ.ವಿರೂಪಾಕ್ಷ ಅವರಿಂದ ಸುಡಗಾಡ ಸಿದ್ಧರ ಕೈ ಚಳಕ, ತಾಜಪೂರಿನ ಶ್ರೀಮಂತ ಮಾದರ ಅವರಿಂದ ಜಾನಪದ ಗೀತೆಗಳು, ವಿಜಯನಗರ ಜಿಲ್ಲೆಯ ಕೆ.ನಾರಾಯಣಪ್ಪ ಕಾರಿಗನೂರ ಅವರಿಂದ ತೊಗಲು ಗೊಂಬೆ ಹಾಗೂ ಲಚ್ಯಾಣದ ಘಂಟೆಪ್ಪ ಮಾದರ ಹಾಗೂ ಸಂಗಡಿಗರಿಂದ ರೇಣುಕಾ ಯಲ್ಲಮ್ಮ ಬಯಲಾಟ ಪ್ರದರ್ಶನಗೊಳ್ಳಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
