ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಜಿಪಂ ಸಿಇಓ ರಾಹುಲ್ ಶಿಂಧೆ ಸೂಚನೆ
ವಿಜಯಪುರ: ನಗರದ ಹೊರವಲಯದ ಭೂತನಾಳ ಗ್ರಾಮದ ಹತ್ತಿರ ನಿರ್ಮಾಣವಾಗುತ್ತಿರುವ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿಯನ್ನು ಇದೇ ಜನವರಿ ೧೫ರೊಳಗೆ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಸೂಚನೆ ನೀಡಿದ್ದಾರೆ.
ಗುರುವಾರ ಸೈಕ್ಲಿಂಗ್ ವೆಲೋಡ್ರೋಂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಸೈಕ್ಲಿಂಗ್ವೆ ಲೊಡ್ರೊಂ ಕಾಮಗಾರಿಯು ಆರಂಭವಾಗಿ ಬಹಳ ದಿನಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಇದರಿಂದ ಈ ಭಾಗದ ಸೈಕ್ಲಿಸ್ಟ್ ಗಳಿಗೆ ತೊಂದರೆಯಾಗುತ್ತಿರುವುದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಪ್ರಥಮಾಧ್ಯತೆಯಲ್ಲಿ ಬಾಕಿ ಉಳಿದ ಕಾಮಗಾರಿಯನ್ನು ಕೈಗೊಂಡು ಜನೇವರಿ ೧೫ರೊಳಗಾಗಿ ಪೂರ್ಣಗೊಳಿಸುವಂತೆ ಸೂಚಿಸಿದ ಅವರು, ಕಾಮಗಾರಿಯ ಗುಣಮಟ್ಟದಲ್ಲಿ ಯಾವದೇ ರಾಜಿ ಮಾಡಿಕೊಳ್ಳದೇ ಉತ್ತಮ ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಅವರು ಸೂಚಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪಿ.ಎಚ್.ಚವ್ಹಾಣ, ಸಹಾಯಕ ಅಭಿಯಂತರ ಎ.ಸಿ.ಮ್ಯಾಗೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಣಕಾಲ ಸೇರಿದಂತೆ ಇತರರು ಉಪಸ್ಥಿತರಿದ್ದರು.

