ಮಕ್ಕಳ ಬಳಗದ ಚಿಣ್ಣರ ನುಡಿಸಿರಿ-೪೭ ಗೆ ಚಾಲನೆ ನೀಡಿದ ಶಾಸಕ ಅಶೋಕ ಮನಗೂಳಿ ಅಭಿಮತ
ಸಿಂದಗಿ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರಹೊಮ್ಮಿಸಲು ಅವರಿಗೆ ಸೂಕ್ತ ವೇದಿಕೆ ನೀಡಬೇಕು. ಸೂಕ್ತ ವೇದಿಕೆ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವ ಮೂಲಕ ತಮ್ಮ ವ್ಯಕ್ತಿತ್ವ ರೂಪಿಸಿಕೊಳ್ಳುತ್ತಾರೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಸ್ಥಳಿಯ ಮಕ್ಕಳ ಬಳಗ ಸಿಂದಗಿ ಇವರು ಸರಕಾರಿ ಆದರ್ಶ ವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡ ಚಿಣ್ಣರ ನುಡಿ ಸಿರಿ-೪೭ ಕಾರ್ಯಕ್ರಮದಲ್ಲಿ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಹ.ಮ.ಪೂಜಾರ ಗುರುಗಳು ಶಿಕ್ಷಕ ವೃತ್ತಿಯ ಜೊತೆಗೆ ೧೯೭೬ರಲ್ಲಿ ಮಕ್ಕಳ ಬಳಗ ಕಟ್ಟುವ ಮೂಲಕ ಮಕ್ಕಳಿಗೆ ಸೂಕ್ತ ವೇದಿಕೆ ನೀಡಿ ಅವರ ವ್ಯಕ್ತಿತ್ವ ವಿಕಸನಕ್ಕೆ ಕಾರಣರಾಗಿದ್ದಾರೆ. ಅವರು ಮಕ್ಕಳ ಬಳಗದ ಮೂಲಕ ಚಿಣ್ಣರ ನುಡಿ ಸಿರಿ, ಮಕ್ಕಳ ಹಬ್ಬ, ಮನೆ ಅಂಗಳದಲ್ಲಿ ಚಿಲಿಪಿ, ಶಾಲೆಯ ಆವರಣದಲ್ಲಿ ಮಕ್ಕಳ ಕಲರವ, ವಿಜ್ಞಾನ ಮೇಳ, ಮಕ್ಕಳ ಸಾಹಿತ್ಯ ಸಮ್ಮೇಳನ ಮುಂತಾದ ವೇದಿಕೆ ನೀಡುವ ಮೂಲಕ ಮಕ್ಕಳ ಪ್ರತಿಭೆ ಅನಾವರಣಗೊಳಿಸಲು ಮಕ್ಕಳಿಗೆ ಪ್ರೋತ್ಸಾಹಿಸಿದ್ದಾರೆ ಎಂದು ಹೇಳಿದರು. ನಾನು ಶಾಸಕನಾದ ಮೇಲೆ ಪ್ರಾಥಮಿಕ ಶಿಕ್ಷಣಕ್ಕೆ ಒತ್ತುಕೊಡುವ ಉದ್ದೇಶದಿಂದ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳ ಜಿರ್ಣೊಧ್ಧಾರ ಕಾರ್ಯಕ್ರಮಗಳನ್ನು ಹೆಚ್ಚಿನ ಮಹತ್ವ ನೀಡುತ್ತಿದ್ದೇನೆ. ಸರ್ಕಾರಿ ಶಾಲೆಗಳಿಗೆ ಹಂತ ಹಂತವಾಗಿ ಮೂಲಕ ಮೂಲಸೌಕರ್ಯಗಳನ್ನು ಒದಗಿಸುವ ಕಾರ್ಯ ಮಾಡಕಾಗುತ್ತದೆ. ಎಲ್ಲ ಅಂಶಗಳನ್ನು ಇಟ್ಟುಕೊಂಡು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವಂತ ಎರಡು ಶಾಲೆಗಳನ್ನು ಆಯ್ಕೆ ಮಾಡಿಕೊಂಡು ಪ್ರತಿ ಶಾಲೆಗೆ ೨೫ ಲಕ್ಷ ಅನುದಾನ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವ ಕಾರ್ಯ ಮಾಡಲಾಗುತ್ತದೆ. ಆದರ್ಶ ಸರಕಾರಿಯಲ್ಲಿ ಮೂಲಭೂತ ಸೌಕರ್ಯ ನಿರ್ಮಾಣಕ್ಕೆ ೧೦ ಲಕ್ಷ ರೂ. ಅನುದಾನ ನೀಡಲಿದ್ದು ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡುತ್ತೇನೆ ಎಂದು ಹೇಳಿದರು.
ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ವರ್ಷಿಣಿ ನಾಯಕ ಸಸಿಗೆ ನೀರುಣಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿನಿ ಶರಧಿ ಹಿರೇಮಠ, ವಿಜಯಪುರದ ರಾಮಕೃಷ್ಣ ವಿದ್ಯಾಶಾಲೆಯ ವಿದ್ಯಾರ್ಥಿನಿ ದಾನೇಶ್ವರಿ ಆಲಾಳ, ಮಕ್ಕಳ ಸಾಹಿತಿ ಎಸ್.ಎಸ್. ಸಾತಿಹಾಳ ಅಧ್ಯಕ್ಷತೆ ವಹಿಸಿದ ಸರಕಾರಿ ಆದರ್ಶ ವಿದ್ಯಾಲಯದ ಮುಖ್ಯಾದ್ಯಾಪಕ ಎಸ್.ಕೆ. ಬಿರಾದಾರ, ದೇವರಹಿಪ್ಪರಗಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿನಿ ನಂದಿತಾ ಸಿಂದಗಿ ಸಿಂದಗಿಯ ಪ್ರೇರಣಾ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ನಂದಿನಿ ಚವ್ಹಾಣ ಮಾತನಾಡಿದರು.

