ವಿಜಯಪುರ: ಕೋವಿಡ್-೧೯ ಉಪತಳಿ ಜೆಎನ್.೧ ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕಾರಣ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಅಗತ್ಯವಿರುವ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ಕೇಸ್ವಾನ್ ಸಭಾಂಗಣದಲ್ಲಿ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಸೋಂಕು ಪತ್ತೆ, ಸೋಂಕಿತರ ಚಿಕಿತ್ಸೆ ವಿಶೇಷ ಘಟಕ, ಆಕ್ಸಿಜನ್ ಘಟಕ, ಔಷಧ ಸೇರಿದಂತೆ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚಿಸಿದ ಅವರುಕ, ಜಿಲ್ಲಾ ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ, ತುರ್ತು ನಿಗಾ ಘಟಕ, ಉಪಕರಣಗಳ ಪರಿಶೀಲನೆ, ಆಕ್ಸಿಜನ್ ಸಿಲಿಂಡರ್ ಮಾಹಿತಿ, ಐಸಿಯುದಲ್ಲಿ ಇರುವ ಯಂತ್ರೋಪಕರಣಗಳು ಮತ್ತು ಔಷಧಗಳ ಲಭ್ಯತೆ ಕುರಿತು ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅವರು ಸೂಚನೆ ನೀಡಿದ್ದಾರೆ.
ಪ್ರಸ್ತುತ ಹವಾಮಾನ, ಚಳಿ, ವಾತಾವರಣ ಇರುವುದರಿಂದ ಸೋಂಕು ತಗಲುವ ಸಾಧ್ಯತೆ ಹೆಚ್ಚಾಗುವುದರಿಂದ ಆರೋಗ್ಯ ಇಲಾಖೆ ಸೂಚನೆಗಳನ್ನು ಪಾಲಿಸಬೇಕು. ಹಿರಿಯ ನಾಗರಿಕರು, ದೀರ್ಘಕಾಲಿನ ಸಮಸ್ಯೆ ಹೊಂದಿರುವವರು, ಗರ್ಭೀಣಿಯರು, ಬಾಣಂತಿಯರು ಮನೆಯಿಂದ ಹೊರಗೆ ಹೋಗುವಾಗ, ಜನಸಂದಣಿ ಪ್ರದೇಶದಲ್ಲಿ ಮಾಸ್ಕ ಧರಿಸಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ಸಮಸ್ಯೆ ಇರುವವರು ತಕ್ಷಣ ವೈದ್ಯರ ಸಲಹೆ ಪಡೆದುಕೊಳ್ಳಬೇಕು ಈ ಕುರಿತು ಮನೆ ಮನೆಗೆ ಹೋಗಿ ಆರೋಗ್ಯ ಶಿಕ್ಷಣ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ ಅವರು ಸೂಚಿಸಿದ್ದಾರೆ.
ಸರಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿರುವ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳ ಆಸ್ಪತ್ರೆಯಲ್ಲಿ ಆಕ್ಸಿಜನ್, ಐ.ಸಿ.ಯು ಬೇಡ್, ಕೋವಿಡ್ ಪರೀಕ್ಷೆ, ಔಷಧಿ ಹಾಗೂ ಅಂಬ್ಯೂಲೆನ್ಸ್ ಲಭ್ಯತೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಬದ್ರೂದ್ದಿನ ಸೌದಾಗರ, ಡಬ್ಲೂಎಚ್ಓ ಸರ್ವೇಲೆನ್ಸ್ ಅಧಿಕಾರಿ ಡಾ. ಮುಕುಂದ ಗಲಗಲಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕವಿತಾ ದೊಡಮನಿ, ಜಿಲ್ಲಾ ಆರ್.ಸಿ.ಎಚ್.ಅಧಿಕಾರಿ ಡಾ.ಕೆ.ಡಿ.ಗುಂಡಬಾವಡಿ, ಜಿಲ್ಲಾ ಆಸ್ಪತ್ರೆಯ ಆರ್ಎಂಓ ಅಧಿಕಾರಿಗಳು, ಬಿಎಲ್ಡಿಇ ಸಂಸ್ಥೆಯ ವೈದ್ಯರು, ಖಾಸಗಿ ಆಸ್ಪತ್ರೆ ವೈದ್ಯರು, ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ|| ಬಸವರಾಜ ಹುಬ್ಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

