ವಿಜಯಪುರ: ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶಿಂಧೆ ಅವರು ಡಿ.೨೭ರ ಬುಧವಾರದಂದು ತಿಕೋಟಾ ತಾಲೂಕಿನ ಲೋಹಗಾಂವ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಫುಡ್ ಪಾರ್ಕ್ ಅಭಿವೃದ್ಧಿಗಾಗಿ ಸುಮಾರು ೭೫ ಎಕರೆ ಭೂಮಿಯನ್ನು ಕರ್ನಾಟಕ ಆಹಾರ ನಿಯಮಿತ (ಫುಡ್ ಕರ್ನಾಟಕ ಲಿ.) ಸಂಸ್ಥೆಗೆ ಮೀಸಲಿಡಲಾಗಿದೆ. ಇಲ್ಲಿ ಕೃಷಿ ಆಧಾರಿತ ಕೈಗಾರಿಕೆಗಳಿಗೆ ಅವಕಾಶ ನೀಡಲಾಗುತ್ತದೆ. ಮೊದಲನೇ ಹಂತದಲ್ಲಿ ೨೫ ಎಕರೆ ಭೂಮಿಯನ್ನು ಅಭಿವೃದ್ಧಿಪಡಿಸಿ ಇಂಡಸ್ಟ್ರಿಯಲ್ ಫ್ಲಾಟ್ಗಳನ್ನು ತಯಾರಿಸಲಾಗುತ್ತದೆ. ಹಾಗೂ ಕೃಷಿ ಕೈಗಾರಿಕೆ ಮಾಡುವವರಿಗೂ ಸಹ ಅವಕಾಶ ನೀಡಲಾಗುತ್ತದೆ. ಎರಡನೇ ಹಂತದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಪಡಿಸುವುದು ಮತ್ತು ಮೂರನೇ ಹಂತದಲ್ಲಿ ಒಳಚರಂಡಿ ಸಂಸ್ಕರಣಾ ಘಟಕ ಬಳಸಿದ ನೀರನ್ನು ಮರು ಬಳಕೆ ಮಾಡುವ ಉದ್ದೇಶದಿಂದ ಶುದ್ಧೀಕರಣ ಘಟಕ ನಿರ್ಮಾಣ ಮಾಡಲಾಗುತ್ತದೆ. ಹೀಗೆ ಮೂರು ಹಂತಗಳಲ್ಲಿ ಈ ಫುಡ್ ಪಾರ್ಕ್ ಅಭಿವೃದ್ಧಿಗೆ ಯೋಜನೆ ಸಿದ್ಧಪಡಿಸಲಾಗಿದೆ. ಪ್ರಸ್ತುತದಲ್ಲಿ ರಸ್ತೆ ಸಂಪರ್ಕ, ಚರಂಡಿ ವ್ಯವಸ್ಥೆ, ನೀರು ಸರಬರಾಜು ಹಾಗೂ ವಿದ್ಯುತ್ ಸರಬರಾಜು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಇದನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖಾಂತರ ಅಭಿವೃದ್ಧಿ ಪಡಿಸಲು ಯೋಜನೆಯು ನಗರ ಯೋಜನಾ ಅನುಮೋದನೆ ಹಂತದಲ್ಲಿರುತ್ತದೆ.
ಈ ಸಂದರ್ಭದಲ್ಲಿ ಅಲ್ಲಿನ ಸ್ಥಿತಿಗತಿ ಹಾಗೂ ಸದರಿ ಕಾಮಗಾರಿಯನ್ನು ಕಡಿಮೆ ಸಮಯದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸುವ ವಿಧಾನದ ಕುರಿತು ಚರ್ಚೆ ನಡೆಸಿದರು. ಈ ಕಾಮಗಾರಿಗೆ ಸಂಪರ್ಕ ಹೊಂದುವ ಎರಡು ರಸ್ತೆಗಳನ್ನು ಅಭಿವೃದ್ಧಿಪಡಿಸಲು ಹಾಗೂ ಹತ್ತಿರದ ಭೂತನಾಳ ಕೆರೆಯ ಮುಖಾಂತರ ನೀರು ಸರಬರಾಜು ಮಾಡುವುದು, ವಿದ್ಯುತ್ ಸರಬರಾಜು ಮಾಡುವ ಕುರಿತು ಆಯಾ ಇಲಾಖಾ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು. ಸ್ಥಳದ ಸುತ್ತ ಮುತ್ತಲಿನ ಕೃಷಿ ಉತ್ಪನ್ನಗಳ ಸಂಸ್ಕರಣೆ ಮತ್ತು ಕೃಷಿ ಉತ್ಪನ್ನಗಳ ರಫ್ತಿನ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ತೋಟಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಕೃಷಿ ಆಧಾರಿತ ಕೈಗಾರಿಕೆ ಅಭಿವೃದ್ಧಿಪಡಿಸುವ ಯೋಜನೆಯನ್ನು ರೂಪುಗೊಳಿಸುವ ಕುರಿತು ಪಾವರ್ ಪಾಯಿಂಟ್ ಪ್ರೆಸೆಂಟೇಶನ್ ಸಿದ್ಧಪಡಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ದಿ ಸಚಿವರಾದ ಎಂ.ಬಿ. ಪಾಟೀಲ ರವರ ಅಧ್ಯಕ್ಷತೆಯಲ್ಲಿ ಜರುಗಲಿರುವ ಸಭೆಯಲ್ಲಿ ಪ್ರಸ್ತುತ ಪಡಿಸಲು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರಶಾಂತ ಬಾರಿಗಿಡದ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ಆ.W, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ರಾಹುಲ್ ಭಾವಿದೊಡ್ಡಿ, ತಿಕೋಟಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಸವರಾಜ ಐನಾಪುರ, ವಲಯ ಅರಣ್ಯಾಧಿಕಾರಿ ಗಿರೀಶ ಹಲಕುಡೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಪಾಟೀಲ, ಹೆಸ್ಕಾಂ ಇಲಾಖೆಯ ವಿಭಾಗಾಧಿಕಾರಿಗಳಾದ ಬಿ.ಓ. ರಾಠೋಡ, ಲೋಹಗಾಂವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪದ್ಮಿನಿ ಬಿರಾದಾರ, ಲೋಹಗಾಂವ ಗ್ರಾಮ ಪಂಚಾಯಿತಿಯ ಸರ್ವ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

