ಜಿಲ್ಲಾಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಜನ್ಮದಿನ ಪ್ರಯುಕ್ತ ವಿಶ್ವಮಾನವ ದಿನಾಚರಣೆ
ವಿಜಯಪುರ: ಜ್ಞಾನಪೀಠ ಪುರಸ್ಕೃತ ಕನ್ನಡದ ಮೊದಲ ಸಾಹಿತಿ, ಕನ್ನಡ ನಾಡು-ನುಡಿಗೆ ತಮ್ಮ ಜೀವನವ ಮುಡಿಪಾಗಿಟ್ಟು, ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ರಾಷ್ಟ್ರ ಕವಿ, ವಿಶ್ವ ಮಾನವರಾಗಿ ರಾಷ್ಟ್ರದಲ್ಲಿ ತಮ್ಮ ಸಾಹಿತ್ಯ ಸಂಚಲನದಿಂದ ಮೆರಗು ನೀಡಿ ರಾಷ್ಟ್ರ ಕವಿ ಎನಿಸಿಕೊಂಡವರು ಕುವೆಂಪು ಅವರು ಮಾತ್ರ ಎಂದು ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮಾತನಾಡಿದ ಅವರು, ಕುವೆಂಪು ಅವರು ೨೦ನೇ ಶತಮಾನ ಕಂಡ ದೈತ್ಯ ಪ್ರತಿಭೆ. ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ‘ಶ್ರೀ ರಾಮಾಯಣ ದರ್ಶನಂ’ನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದು, ಇಂದಿಗೂ ಅವರ ಸಾಹಿತ್ಯ ಕೃತಿಗಳು ಪ್ರಸ್ತುತದಲ್ಲಿವೆ. ಅವರ ಎರಡು ಬೃಹತ್ ಕಾದಂಬರಿಗಳಾದ ‘ಕಾನೂರು ಹೆಗ್ಗಡತಿ’ ಹಾಗೂ ‘ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿದ್ದು, ಅವರ ನಾಟಕಗಳಿಗೆ ವೈಚಾರಿಕತೆಯ ಸ್ಪರ್ಶವಿದೆ ಎಂದು ಹೇಳಿದರು.
ಇಂದು ರಾಷ್ಟ್ರ ಕವಿ ಕುವೆಂಪು ಅವರ ಜನ್ಮ ದಿನದ ಅಂಗವಾಗಿ ವಿಶ್ವಮಾನವ ದಿನಾಚರಣೆ ಹಮ್ಮಿಕೊಂಡಿದ್ದು, ಪ್ರತಿವರ್ಷ ಅವರಿಗೆ ಗೌರವ ನಮನ ಸಲ್ಲಿಸುವುದಷ್ಟೇ ಅಲ್ಲದೇ ಕನ್ನಡ ಸಾಹಿತ್ಯವನ್ನು ಓದುವ ಮೂಲಕ ಅವರ ವಿಚಾರಧಾರೆಗಳನ್ನು ಮೆಲುಕು ಹಾಕಬೇಕು ಅಂದಾಗ ಮಾತ್ರ ಅವರಿಗೆ ಸ್ಮರಿಸಿದ ಸ್ಮರಣೆ ಸಾರ್ಥಕವಾಗುವುದು. ಪ್ರತಿಯೊಬ್ಬರು ವಿಶ್ವ ಮಾನವ ಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ವಿಶೇಷ ಉಪನ್ಯಾಸ ನೀಡಿದ ಪೂಜಾ ಕೆ. ಎಸ್. ಅವರು ಮಾತನಾಡಿ, ಕುವೆಂಪು ಅವರು ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು ಎಂದರು.
ಜಿಲ್ಲಾ ವಿಕಲ ಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಅಧಿಕಾರಿಗಳಾದ ರಾಜಶೇಖರ ದೈವಾಡಿ ಅವರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಚುನಾವಣಾ ತಹಶೀಲ್ದಾರರಾದ ಪ್ರೇಮಸಿಂಗ್ ಪವಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ್, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಅನುಸೂಯಾ ಚಲವಾದಿ, ವಿದ್ಯಾವತಿ ಅಂಕಲಗಿ, ಅಡಿವೆಪ್ಪ ಸಾಲಗಲ್, ಗಿರೀಶ ಕುಲಕರ್ಣಿ, ಭೀಮರಾಯ ಜಿಗಜಿಣಗಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು. ರಕ್ಷಂದಾ ತಿಳಗೊಳ ಕುವೆಂಪು ಅವರ ಸುಮಧುರವಾದ ಗೀತೆಗಳನ್ನು ಪ್ರಸ್ತುತಪಡಿಸಿದರು. ಎಚ್. ಮಮದಾಪುರ ಕಾರ್ಯಕ್ರಮದ ನಿರೂಪಣೆ ಹಾಗೂ ವಂದನಾರ್ಪಣೆ ನೆರವೇರಿಸಿದರು.

